ADVERTISEMENT

ಮಟ್ಕಾ, ಜೂಜು ಕಿಂಗ್‌ಪಿನ್‌ಗಳ ಮಟ್ಟಹಾಕಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 16:44 IST
Last Updated 10 ಜೂನ್ 2020, 16:44 IST
ಗೃಹ ಸಚಿವ ಬಸವರಾಜಬೊಮ್ಮಾಯಿ
ಗೃಹ ಸಚಿವ ಬಸವರಾಜಬೊಮ್ಮಾಯಿ   

ತುಮಕೂರು: ‘ತುಮಕೂರು ಜಿಲ್ಲೆಯು ಬೆಂಗಳೂರಿಗೆ ಸಮೀಪವಿದೆ. ಮಟ್ಕಾ, ಜೂಜು, ಗಾಂಜಾ ಇತರ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ವರದಿ ಆಗುತ್ತಿವೆ. ಈ ಪ್ರಕರಣಗಳ ಕಿಂಗ್‌ಪಿನ್‌ಗಳ ಪತ್ತೆಗೂ ಕ್ರಮವಹಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೂಜು, ಮಟ್ಕಾ, ಗಾಂಜಾ, ಡ್ರಗ್ಸ್ ಬಗ್ಗೆ ವಿಶೇಷ ಗಮನವಹಿಸಿ ಕೆಲಸ ಮಾಡಬೇಕು. ದೂರು ಬರುವವರೆಗೂ ಕಾಯದೆ ಸ್ವಯಂ ಪ್ರೇರಿತರಾಗಿ ದಾಳಿ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇನೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವುದಾಗಿ ಐಜಿಪಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ಲಾಕ್‍ಡೌನ್ ಸಂದರ್ಭದಲ್ಲಿ ಜೂಜು, ಮಟ್ಕಾ ಅಡ್ಡೆಗಳ ಮೇಲೆ ಜಿಲ್ಲೆಯ ಪೊಲೀಸರು ದಾಳಿ ಮಾಡಿದ್ದಾರೆ. ಕೊರೊನಾ ಸಂದರ್ಭವನ್ನು ಬಹಳ ಅತ್ಯುತ್ತಮವಾಗಿ ನಿರ್ವಹಿಸಿದ್ದಾರೆ ಎಂದರು.

ADVERTISEMENT

‘ಬೆಂಗಳೂರಿಗೆ ಸಮೀಪವಿರುವ ಜಿಲ್ಲೆಯಲ್ಲಿ ಕೊರೊನಾ ನಿಗ್ರಹ ಸವಾಲಾಗಿತ್ತು. ಈ ಸವಾಲಿನ ಕೆಲಸವನ್ನು ಪೊಲೀಸರು ಚಾಕಚಕ್ಯತೆಯಿಂದ ನಿರ್ವಹಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯೂ ಕಡಿಮೆ ಇತ್ತು. ಮತ್ತೆ ಲಾಕ್‍ಡೌನ್ ಸಡಿಲಗೊಂಡ ಮೇಲೆ ಒಂದೊಂದೇ ಪ್ರಕರಣಗಳು ವರದಿ ಆಗುತ್ತಿವೆ. ಲಾಕ್‍ಡೌನ್ ಸಂದರ್ಭದಲ್ಲಿ ಇದ್ದಂತೆಯೇ ಅಪರಾಧ ಪ್ರಕರಣ ಇಳಿಮುಖವಾಗಲು ಶ್ರಮಿಸಲು ಸೂಚಿಸಿದ್ದೇನೆ’ ಎಂದು ವಿವರಿಸಿದರು.

ಈಗ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದ ಠಾಣೆಗಳಿಗೆ ಹೊಸ ಕಟ್ಟಡ ಹಾಗೂ ಸಿಬ್ಬಂದಿಗೆ ವಸತಿಗೃಹಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಎಡಿಜಿಪಿ ಅಮರ್‌ಕುಮಾರ್ ಪಾಂಡೆ, ಕೇಂದ್ರ ವಲಯ ಐಜಿಪಿ ಶರತ್ಚಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.