ಉಡುಪಿ: ಸಕಾರಣ ಇಲ್ಲದೆ, ಕಾನೂನಿನ ಒಪ್ಪಿಗೆ ಇಲ್ಲದೆ ಖಾಸಗಿ ಮಾತುಕತೆಯನ್ನು ಕದ್ದಾಲಿಸುವುದು ತಪ್ಪು. ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುತ್ತಿದ್ದು, ಚಾರ್ಜ್ಶೀಟ್ ಬಳಿಕ ವಿವರಗಳು ಬಹಿರಂಗವಾಗಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಪ್ರಕರಣ ತನಿಖಾ ಹಂತದಲ್ಲಿರುವಾಗ ಪ್ರತಿಕ್ರಿಯಿಸುವುದು ಸರಿಯಲ್ಲ. ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಕರಣದ ವಿವರಗಳನ್ನು ಸಿಬಿಐಗೆ ಒಪ್ಪಿಸಿದ್ದಾರೆ. ಮುಂದೇನಾಗುವುದೊ ನೋಡೋಣ ಎಂದರು.
ಉಪ ಚುನಾವಣೆ ಮುಂದೂಡಿಕೆಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹಸಚಿವರು ಎಚ್ಡಿಕೆ ಮೊಸರಿನಲ್ಲಿ ಕಲ್ಲು ಹುಡುಕುವ ವ್ಯಕ್ತಿ ಎಂದು ಟೀಕಿಸಿದರು.
2 ಹಂತದಲ್ಲಿ ಔರಾದ್ಕರ್ ವರದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್, ಪಿಎಸ್ಐ, ಸರ್ಕಲ್ ಇನ್ಸ್ಪೆಕ್ಟರ್ಗಳನ್ನು ಸೇರಿಸಲಾಗಿತ್ತು. ಆದರೆ, ಕಾರಾಗೃಹ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸೇರಿರಲಿಲ್ಲ. ಇದೀಗ ಎರಡನೇ ಹಂತದಲ್ಲಿ ಅವರನ್ನೂ ಸೇರಿಸಿ ವರದಿಗೆ ಒಪ್ಪಿಗೆ ನೀಡಲಾಗಿದೆ. ವರದಿ ಜಾರಿಗೆ ಆರ್ಥಿಕ ಇಲಾಖೆ ಕೆಲವು ಸ್ಪಷ್ಟನೆಗಳನ್ನು ಕೇಳಿದ್ದು, ನೀಡಲಾಗಿದೆ. ವಾರದೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.