ADVERTISEMENT

ಕೈದಿಗಳ ಮನ ಪರಿವರ್ತನೆ ಮಾಡಿ: ಗೃಹ ಸಚಿವ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 17:10 IST
Last Updated 31 ಜನವರಿ 2026, 17:10 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ಕೈದಿಗಳ ಮನಪರಿವರ್ತನೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಸ್ಥಾಪಿಸಲಾದ ಕಾರಾಗೃಹ 'ಸೆಂಟ್ರಲ್ ಕಮಾಂಡ್ ಸೆಂಟರ್'ಅನ್ನು ಉದ್ಘಾಟಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ADVERTISEMENT

‘ಕರ್ತವ್ಯದಲ್ಲಿ ಲೋಪವಾದರೆ, ಇಡೀ ವ್ಯವಸ್ಥೆಯೇ ಹಾಳಾಗುತ್ತದೆ. ಕರ್ತವ್ಯ ಲೋಪವಾಗದಂತೆ ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಸಿಬ್ಬಂದಿ ಕರ್ತವ್ಯದ ಮೇಲೆ ಹಿರಿಯ ಅಧಿಕಾರಿಗಳು ನಿಗಾವಹಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿ. ಕರ್ತವ್ಯದಲ್ಲಿ ತಪ್ಪು ಎಸಗಿ ನಾಲ್ಕು ಜನರಿಂದ ತಪ್ಪಿಸಿಕೊಳ್ಳಬಹುದು. ಆದರೆ, ಆತ್ಮಸಾಕ್ಷಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದರು.

‘ಸಿಬ್ಬಂದಿ ಕಣ್ಣುತಪ್ಪಿ, ಯಾವುದೇ ವಸ್ತುಗಳು ಜೈಲಿನ ಒಳಗೆ ಹೋಗಲು ಸಾಧ್ಯವಿಲ್ಲ. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಇದೆಲ್ಲ ಸಾಧ್ಯ’ ಎಂದರು.

‘ಕಾರಾಗೃಹ ಇಲಾಖೆ ಎನ್ನುವುದಕ್ಕಿಂತ ಸುಧಾರಣೆ ಇಲಾಖೆ ಎನ್ನುವುದು ಮುಖ್ಯ. ಯಾವುದೋ ಕಾರಣಕ್ಕಾಗಿ ವ್ಯಕ್ತಿ ತಪ್ಪು ಮಾಡಬಹುದು. ಆತನನ್ನು ಸರಿಪಡಿಸುವುದು ನಮ್ಮ ಕೆಲಸ ಎಂಬ ನಿಟ್ಟಿನಲ್ಲಿ ಸುಧಾರಣಾ ಇಲಾಖೆ ಎಂದು ಮಾಡಲಾಗಿದೆ. ನಾನು ಮೂರು ಬಾರಿ ಗೃಹಸಚಿವನಾದ ಅವಧಿಯಲ್ಲಿ ಸುಮಾರು 2,500 ಕೈದಿಗಳನ್ನು ಸುಧಾರಣೆ ಮಾಡಿ, ಬಿಡುಗಡೆ ಮಾಡಲಾಗಿದೆ. ಇಲಾಖೆಯಲ್ಲಿ ಬದಲಾವಣೆ ತಂದು ಜನ ಮೆಚ್ಚಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಪೊಲೀಸ್ ಉಪಮಹಾನಿರೀಕ್ಷಕ ಜಿನೇಂದ್ರ ಖಣಗಾವಿ, ಪೊಲೀಸ್ ಅಧೀಕ್ಷಕ ಅಂಶು ಕುಮಾರ್ ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.