ADVERTISEMENT

ಹೋಮಿಯೊಪಥಿ ಮಂಡಳಿ ಚುನಾವಣೆ: ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 14:25 IST
Last Updated 4 ಅಕ್ಟೋಬರ್ 2021, 14:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಕರ್ನಾಟಕ ಹೋಮಿಯೊಪಥಿ ಮಂಡಳಿ ಚುನಾವಣೆಯಲ್ಲಿ ಭೌತಿಕ ಮತದಾನಕ್ಕೆ ಅವಕಾಶ ಕಲ್ಪಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಡಾ. ಪ್ರಕಾಶ್ ಮಂಟಿಕೊಪ್ಪ ಸೇರಿದಂತೆ ಮೂವರು ಹೋಮಿಯೊಪಥಿ ವೈದ್ಯರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಹೋಮಿಯೊಪಥಿ ಮಂಡಳಿ ರಿಜಿಸ್ಟ್ರಾರ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ, ವಿಚಾರಣೆ ಮುಂದೂಡಿದೆ.

ADVERTISEMENT

ಅರ್ಜಿದಾರರ ಪರ ವಕೀಲ ದೇವಿ ಪ್ರಸಾದ್ ಶೆಟ್ಟಿ ವಾದ ಮಂಡಿಸಿ, ಕರ್ನಾಟಕ ಹೋಮಿಯೊಪಥಿ ವೈದ್ಯರ ಕಾಯ್ದೆ-1961ರ ಕಲಂ 11 ಹಾಗೂ 12ರ ಪ್ರಕಾರ ಹೋಮಿಯೊಪಥಿ ಮಂಡಳಿಯ ಚುನಾವಣೆಯಲ್ಲಿ ಅಂಚೆ ಮತಪತ್ರ ಮೂಲಕ ಮಾತ್ರ ಮತದಾನ ಮಾಡಲು ಅವಕಾಶವಿದೆ. ಈ ವ್ಯವಸ್ಥೆಯಲ್ಲಿ ಅಕ್ರಮ ನಡೆಯುವ ಸಾಧ್ಯತೆ ಇರುತ್ತದೆ. ಚುನಾವಣೆಯಲ್ಲಿ ಪಾರದರ್ಶಕತೆ ಇರುವುದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

‘ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಇತ್ತೀಚಿನ ತಂತ್ರಜ್ಞಾನ ಬಳಸಿಕೊಂಡು ಸದಸ್ಯರ ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಇ ಮೇಲ್‌ಗೆ ಮತಪತ್ರ ಕಳುಹಿಸಿ, ಮತ ಚಲಾವಣೆಗೆ ಅವಕಾಶ ಕಲ್ಪಿಸಲು ಅಥವಾ ಭೌತಿಕ ಮತದಾನ ವ್ಯವಸ್ಥೆ ಕಲ್ಪಿಸಲು ಸರ್ಕಾರ ಹಾಗೂ ಮಂಡಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.