ADVERTISEMENT

ತಾಳಗುಪ್ಪ– ಹೊನ್ನಾವರ ರೈಲ್ವೆ ಮಾರ್ಗ ನಿರ್ಮಾಣದ ಪ್ರಸ್ತಾವ ಬಂದಿಲ್ಲ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 17:34 IST
Last Updated 15 ಸೆಪ್ಟೆಂಬರ್ 2021, 17:34 IST
   

ಬೆಂಗಳೂರು: ತಾಳಗುಪ್ಪ– ಹೊನ್ನಾವರ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ವೆಚ್ಚ ಹಂಚಿಕೆ ಆಧಾರದಲ್ಲಿ ಅನುಷ್ಠಾನಕ್ಕೆ ತರುವ ಸಂಬಂಧ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘82 ಕಿ.ಮೀ. ಉದ್ದದ ತಾಳಗುಪ್ಪ– ಹೊನ್ನಾವರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೈರುತ್ಯ ರೈಲ್ವೆಯು 2010ರಲ್ಲಿ ಸಮೀಕ್ಷೆ ನಡೆಸಿತ್ತು. ಬಳಿಕ ಯೋಜನೆಯ ಮಂಜೂರಾತಿಗಾಗಿ ರೈಲ್ವೆ ಮಂಡಳಿಗೆ ಪ್ರಸ್ತಾವ ಸಲ್ಲಿಸಿದ್ದು, ಅಲ್ಲಿಯೇ ಬಾಕಿ ಇದೆ’ ಎಂದರು.

ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗ ಯೋಜನೆಯು ಪರಿಸರ ಸಂಬಂಧಿ ತೊಡಕುಗಳಿಂದ ನನೆಗುದಿಗೆ ಬಿದ್ದಿದೆ. ತಾಳಗುಪ್ಪ– ಹೊನ್ನಾವರ ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸಲು ಉತ್ತಮ ಮಾರ್ಗ ಲಭಿಸುತ್ತದೆ. ಈ ಯೋಜನೆಗೂ ಪರಿಸರವಾದಿಗಳ ವಿರೋಧ ಬರಬಹುದು. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವುದಕ್ಕಾಗಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪರಿಸರವಾದಿಗಳ ಜತೆ ಶೀಘ್ರದಲ್ಲಿ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಹೊನ್ನಾವರ– ತಾಳಗುಪ್ಪ ಯೋಜನೆಯಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ಆ ಭಾಗದ ಅಭಿವೃದ್ಧಿ ಸಹಕಾರಿಯಾಗಿರುವ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.