
ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟ ಪಾಟ್ನಾದ ರಿತೇಶ್ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ಆದೇಶವನ್ನು ಹೈಕೋರ್ಟ್ ಇದೇ 27ರಂದು ಪ್ರಕಟಿಸಲಿದೆ.
ಈ ಕುರಿತಂತೆ, ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್–ಕರ್ನಾಟಕ’ (ಪಿಯುಸಿಎಲ್) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇ.ಶುಜಾಯುತ್ ಉಲ್ಲಾ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಧು ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಮುಕ್ತಾಯಗೊಳಿಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಪೊಲೀಸರು ಸ್ವಯಂ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳ ಅನುಸಾರ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಹೈಕೋರ್ಟ್ ನಿರ್ದೇಶನ ನೀಡಿದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಲಾಗುವುದು’ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮೃತ ಆರೋಪಿ ಕಲ್ಲು ತೂರಾಟ ನಡೆಸಿದ್ದ ಎಂಬ ಆರೋಪವಿದೆ. ಆದರೆ, ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ಅಪರಾಧಿ ಎಂದು ಸಾಬೀತಾಗಿ ಶಿಕ್ಷೆ ವಿಧಿಸಿಲ್ಲ. ಆಧಾರ್ ಕಾರ್ಡ್ ತರಲು ಮನೆಗೆ ಹೋಗುವಂತೆ ಹೇಳಿ ಆತನ ಮೇಲೆ ಮೂರು ಗುಂಡು ಹಾರಿಸಲಾಗಿದೆ. ಪೊಲೀಸ್ ವಶದಲ್ಲಿದ್ದಾಗಲೇ ಮೇಲೆ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಆ ಸಮಯದಲ್ಲಿ ಸ್ಥಳದಲ್ಲಿ ಎಷ್ಟು ಮಂದಿ ಪೊಲೀಸ್ ಸಿಬ್ಬಂದಿ ಇದ್ದರು ಎಂಬ ಅಂಶ ಗೊತ್ತಾಗಬೇಕಾಗಿದೆ. ಈ ಎಲ್ಲಾ ಅಂಶಗಳ ಕುರಿತು ತನಿಖೆಗೆ ಒಳಪಡುವುದು ಬೇಡವೇ’ ಎಂದು ಪ್ರಶ್ನಿಸಿತು.
ಅಂತಿಮವಾಗಿ, ಲಿಖಿತ ವಾದಾಂಶ ಸಲ್ಲಿಸುವಂತೆ ಶಶಿಕಿರಣ ಶೆಟ್ಟಿ ಅವರಿಗೆ ಸೂಚಿಸಿದ ನ್ಯಾಯಪೀಠ ಶುಕ್ರವಾರ ಆದೇಶ ನೀಡಲಾಗುವುದು ಎಂದು ತಿಳಿಸಿತು.
’ಪೊಲೀಸರು ಸ್ವತಃ ನ್ಯಾಯಾಧೀಶರಾಗಿ, ಆರೋಪಿಗೆ ನ್ಯಾಯ ದಂಡನೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ, ಬಾಲಕಿ ಮತ್ತು ಎನ್ಕೌಂಟರ್ಗೆ ಗುರಿಯಾಗಿರುವ ವ್ಯಕ್ತಿಯ ಮೃತದೇಹಗಳನ್ನು ಸಂರಕ್ಷಿಸಿ ಇರಿಸಬೇಕು. ಶವ ಪರೀಕ್ಷೆಗಾಗಿ ದೆಹಲಿ ಅಥವಾ ಕರ್ನಾಟಕ ಹೊರತುಪಡಿಸಿದ ಅನ್ಯ ರಾಜ್ಯಗಳ ಶಸ್ತ್ರಚಿಕಿತ್ಸಕರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರನ್ನು ಒಳಗೊಂಡ ಸ್ವತಂತ್ರ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ಈ ತನಿಖಾ ತಂಡವು ಕೋರ್ಟ್ ನಿಗಾದಲ್ಲಿ ಕಾರ್ಯ ನಿರ್ವಹಿಸುವಂತೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.