ಆರ್. ಅಶೋಕ
ಬೆಂಗಳೂರು: ‘ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆಗೆ ಕಾರಣರಾದ ಇನ್ಸ್ಪೆಕ್ಟರ್ ಮತ್ತು ಇತರ ಪೊಲೀಸರನ್ನು ಶುಕ್ರವಾರ (ಜ. 9) ಬೆಳಿಗ್ಗೆ 10 ಗಂಟೆಯ ಒಳಗೆ ಅಮಾನತು ಮಾಡಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಗಡುವು ವಿಧಿಸಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಈ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.
‘ಈ ಘಟನೆಗೆ ಮಹಿಳಾ ಆಯೋಗ ಈಗಾಗಲೇ ಛೀಮಾರಿ ಹಾಕಿದೆ. ಮಾನವ ಹಕ್ಕು ಆಯೋಗ ಹಾಗೂ ಮಹಿಳಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ’ ಎಂದರು.
‘ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ಪೂರ್ವಯೋಜಿತ, ರಾಜಕೀಯ ಪ್ರೇರಿತ ಕೃತ್ಯ. ಈ ಘಟನೆಯಿಂದ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಮೇಲೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರೇ ದುಶ್ಯಾಸನರಾಗಿದ್ದಾರೆ’ ಎಂದರು.
‘ಈ ಘಟನೆಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಡಾಗಿದ್ದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದಾರೆ. ಪೊಲೀಸರು ದುಶ್ಯಾಸನನಂತೆ ವಿವಸ್ತ್ರ ಮಾಡಿದ್ದಾರೆ. ಇದು ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಈ ಪ್ರಕರಣವನ್ನು ಮುಚ್ಚಿ ಹಾಕಲು ಷಡ್ಯಂತ್ರ ನಡೆದಿದೆ’ ಎಂದೂ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.