ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಕುಟುಂಬಗಳಿಗೆ ಧನ ಸಹಾಯ ಮತ್ತು ಆಹಾರದ ಕಿಟ್ ವಿತರಣೆ ವಿಚಾರಕ್ಕೂ, ಕಾಂಗ್ರೆಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ ಆಹಾರದ ಕಿಟ್ ವಿತರಣೆ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್ಐ ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಎಸ್ಡಿಪಿಐನಂತಹ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
‘ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ’ ಎಂದು ಡಿಕೆಶಿ ಹೇಳಿದ್ದಾರೆ.
ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹಮ್ಮದ್ ಅವರ ನೆರವಿನಿಂದ ಧನ ಸಹಾಯ ಮತ್ತು ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಜಮೀರ್ ಬೆಂಬಲಿಗರು ಕಾರ್ಯಕ್ರಮ ರದ್ದು ಪಡಿಸಿದ್ದಾರೆ.
‘ಗಲಭೆಯಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ರಂಜಾನ್ ಇರುವುದರಿಂದ ಪ್ರಕರಣದಲ್ಲಿ ಬಂಧಿತರಾಗಿರುವವರ ಕುಟುಂಬದವರಿಗೆ ಆಹಾರದ ಕಿಟ್ ಹಾಗೂ ₹5 ಸಾವಿರ ನೆರವು ನೀಡುತ್ತಿದ್ದೇನೆ. ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ’ ಎಂದು ಶಾಸಕ ಜಮೀರ್ ಬೆಂಬಲಿಗರಿಗೆ ತಿಳಿಸಿದ್ದರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.