ADVERTISEMENT

ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಒತ್ತಾಯ: ರೈತರಿಂದ ಆಮರಣ ಉಪವಾಸ ಆರಂಭ

ಅನಾರೋಗ್ಯ ಹಿನ್ನೆಲೆ; ಕುರಬೂರು ಶಾಂತಕುಮಾರ್‌ ವಾಪಸ್‌

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 13:15 IST
Last Updated 11 ಡಿಸೆಂಬರ್ 2018, 13:15 IST
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರ ಪ್ರತಿಭಟನೆ ಮಂಗಳವಾರವೂ ಮುಂದುವರಿಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ, ರೈತ ಮುಖಂಡರಾದ ಚೂನಪ್ಪ ಪೂಜಾರಿ, ಅಶೋಕ ಯಮಕನಮರಡಿ, ಇತರರು ಪಾಲ್ಗೊಂಡಿದ್ದರು
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರ ಪ್ರತಿಭಟನೆ ಮಂಗಳವಾರವೂ ಮುಂದುವರಿಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ, ರೈತ ಮುಖಂಡರಾದ ಚೂನಪ್ಪ ಪೂಜಾರಿ, ಅಶೋಕ ಯಮಕನಮರಡಿ, ಇತರರು ಪಾಲ್ಗೊಂಡಿದ್ದರು   

ಬೆಳಗಾವಿ: ಕಬ್ಬಿನ ಬಾಕಿ ಬಿಲ್‌ ಕೊಡಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸಿದ್ದ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಅವರು ಮಂಗಳವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ– ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ಕೃಷಿಕ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಅವರು ಪಾಲ್ಗೊಂಡಿದ್ದಾರೆ.

‘ಇಷ್ಟು ದಿನಗಳವರೆಗೆ ಶಾಂತ ರೀತಿಯಿಂದ ಧರಣಿ ನಡೆಸಿದೇವು. ಆದರೆ, ಸರ್ಕಾರ ಇತ್ತ ನೋಡಲಿಲ್ಲ. ಅದಕ್ಕಾಗಿ ಆಮರಣ ಉಪವಾಸ ಆರಂಭಿಸಿದ್ದೇನೆ. ಸದ್ಯದಲ್ಲಿಯೇ ಪಾದಯಾತ್ರೆಯ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆ ಹಾಕಿಕೊಂಡಿದ್ದೇನೆ’ ಎಂದು ಸಿದಗೌಡ ಮೋದಗಿ ಹೇಳಿದರು.

ADVERTISEMENT

ಕುರಬೂರು ಶಾಂತಕುಮಾರ್‌ ವಾಪಸ್‌: ಸಿದಗೌಡ ಮೋದಗಿ ಅವರಿಗೆ ಕಳೆದ ಎರಡು ದಿನಗಳಿಂದ ಬೆಂಬಲ ನೀಡಿ, ಧರಣಿಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಇದಕ್ಕಿಂತ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವೈದ್ಯರು ಹಾಗೂ ರೈತ ಮುಖಂಡರ ಸಲಹೆ ಮೇರೆಗೆ ವಾಪಸ್‌ ಹೋಗುತ್ತಿದ್ದೇನೆ. ನಾನು ಹೋದರೂ, ಇಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ. ಬೇಡಿಕೆ ಈಡೇರುವವರೆಗೆ ನಡೆಯಲಿದೆ’ ಎಂದು ಹೇಳಿದರು.

ವಕೀಲರ ಬೆಂಬಲ:ರೈತರ ಹೋರಾಟಕ್ಕೆ ಬೆಂಬಲ ನೀಡಲು ಬೆಳಗಾವಿ ವಕೀಲರ ಸಂಘ ನಿರ್ಧರಿಸಿದ್ದು, ಬುಧವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯಲು ತೀರ್ಮಾನಿಸಿದೆ.

‘ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸ್ಪಂದನೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಈ ತೀರ್ಮಾನ ಕೈಗೊಂಡಿದ್ದೇವೆ. ಕಲಾಪದಿಂದ ಹೊರಗುಳಿಯುವಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ, ಸದಸ್ಯರಿಗೆ ಸೂಚಿಸಲಾಗಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌. ಕಿವಡಸಣ್ಣವರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.