ADVERTISEMENT

ಹೈದರಾಬಾದ್‌ ಬೆಂಗಳೂರಿಗೆ ಸ್ಪರ್ಧಿಯಲ್ಲ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 15:39 IST
Last Updated 8 ಡಿಸೆಂಬರ್ 2025, 15:39 IST
ಹೈದರಾಬಾದ್‌ನಲ್ಲಿ ಸೋಮವಾರ ನಡೆದ ‘ತೆಲಂಗಾಣ ರೈಸಿಂಗ್’ ಜಾಗತಿಕ ಸಮ್ಮೇಳನದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದರು
ಹೈದರಾಬಾದ್‌ನಲ್ಲಿ ಸೋಮವಾರ ನಡೆದ ‘ತೆಲಂಗಾಣ ರೈಸಿಂಗ್’ ಜಾಗತಿಕ ಸಮ್ಮೇಳನದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದರು   

ಬೆಂಗಳೂರು: ‘ದೇಶದ ಐಟಿ ರಫ್ತಿನಲ್ಲಿ ಬೆಂಗಳೂರು ಶೇ 43ರಷ್ಟು ಪಾಲು ಹೊಂದಿದೆ. ತೆಲಂಗಾಣ ಈ ವಿಚಾರದಲ್ಲಿ ಕಡಿಮೆ ಇದ್ದರೂ ಈ ರಾಜ್ಯದ ದೂರದೃಷ್ಟಿ, ಆಲೋಚನೆ ಬಹಳ ದೊಡ್ಡದಾಗಿದೆ. ಕೆಲವರು, ಬೆಂಗಳೂರಿಗೆ ಹೈದರಾಬಾದ್ ಪ್ರತಿಸ್ಪರ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸ್ಪರ್ಧಿಗಳಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಹೈದರಾಬಾದ್‌ನಲ್ಲಿ ಸೋಮವಾರ ನಡೆದ ‘ತೆಲಂಗಾಣ ರೈಸಿಂಗ್’ ಜಾಗತಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಎಂದು ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ’ ಎಂದರು.

‘ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ’ ಎಂದರು.

ADVERTISEMENT

‘ಈ ಸಮ್ಮೇಳನ ಭವಿಷ್ಯದ ಬಗ್ಗೆ ಚಿಂತನೆ ನಡೆಸಿದೆ. 10 ವರ್ಷಗಳ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಜನ ಆಯ್ಕೆ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದರೂ ಇಲ್ಲಿಗೆ ಬಂದಿದ್ದೇನೆ. ಇಡೀ ದಕ್ಷಿಣ ಭಾರತ ತೆಲಂಗಾಣ ರಾಜ್ಯದ ಬೆನ್ನಿಗೆ ನಿಲ್ಲುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಲಿದೆ. ನಾನು ಇಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಮಾತ್ರ ಬಂದಿಲ್ಲ. ದಕ್ಷಿಣ ಭಾರತದ ಧ್ವನಿಯಾಗಿ ಬಂದಿದ್ದೇನೆ. ದೇಶದ ಪ್ರಗತಿಯಲ್ಲಿ ದಕ್ಷಿಣ ಭಾರತದ ಕೊಡುಗೆ ಅಪಾರ’ ಎಂದರು.

‘ರೇವಂತ್ ರೆಡ್ಡಿ ಅವರ ನಾಯಕತ್ವದಲ್ಲಿ ಸಚಿವರು, ಅಧಿಕಾರಿಗಳು ಒಟ್ಟಿಗೆ ಶ್ರಮಿಸಿ, ತೆಲಂಗಾಣ ರಾಜ್ಯವನ್ನು ಜಾಗತಿಕ ಮಟ್ಟಕ್ಕೆ ಮುನ್ನಡೆಸಲಿದ್ದಾರೆ. ಇವರ ಬೆಂಬಲಕ್ಕೆ ಕರ್ನಾಟಕ ಸರ್ಕಾರ ನಿಲ್ಲಲಿದೆ’ ಎಂದೂ ಶಿವಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.