ಬೆಂಗಳೂರು: ‘ಹೈದರಾಬಾದ್ ಕರ್ನಾಟಕ’ ಇನ್ನು ಮುಂದೆ ‘ಕಲ್ಯಾಣ ಕರ್ನಾಟಕ’ವಾಗಿ ಬದಲಾಗಲಿದೆ.
ಆ ಭಾಗವನ್ನು ‘ಕಲ್ಯಾಣ ಕರ್ನಾಟಕ’ ಎಂದು ಕರೆಯಲು ರಾಜ್ಯ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಹಳೆಯ ಹೆಸರು ಇತಿಹಾಸ ಸೇರಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ‘ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯು ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯಾಗಿ ಪರಿವರ್ತನೆಯಾಗಲಿದೆ.
‘ಎಲ್ಲೆಲ್ಲಿ ಹೈದರಾಬಾದ್ ಕರ್ನಾಟಕ ಪದ ಬಳಕೆಯಾಗಲಿದೆ ಅಂತಹ ಕಡೆಗಳಲ್ಲಿ ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುತ್ತದೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಈ ನಿರ್ಧಾರವನ್ನು ಸ್ವಾಗತಿಸಿ ಟ್ವೀಟ್ ಮಾಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ‘ನಮ್ಮ ಭಾಗದ ಅಭಿವೃದ್ಧಿ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆಯೆ’ ಎಂದು ಪ್ರಶ್ನಿಸಿದ್ದಾರೆ. ಅನುದಾನ ನೀಡುವಲ್ಲೂ ತಾರತಮ್ಯ ಮಾಡಲಾಗುತ್ತಿದ್ದು, ಸಚಿವ ಸಂಪುಟದಲ್ಲಿ ಈ ಭಾಗದ ಒಬ್ಬರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಸೇಡಂ ಶಾಸಕ ರಾಜ್ಕುಮಾರ್ ಪಾಟೀಲ ಸ್ವಾಗತಿಸಿದ್ದು, ‘ನಮ್ಮ ಭಾಗದ ಜನರು ದಾಸ್ಯ ಸಂಕೋಲೆಯ ಸಂಕೇತದಿಂದ ಹೊರ ಬಂದಿದ್ದಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.