ADVERTISEMENT

ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ: ಸುಬ್ಬಾರೆಡ್ಡಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 17:47 IST
Last Updated 16 ಜನವರಿ 2019, 17:47 IST
ಎಸ್.ಎನ್.ಸುಬ್ಬಾರೆಡ್ಡಿ
ಎಸ್.ಎನ್.ಸುಬ್ಬಾರೆಡ್ಡಿ   

ಬಾಗೇಪಲ್ಲಿ: ‘ಶಾಸಕ ಸ್ಥಾನ ನನ್ನ ಪಿತ್ರಾರ್ಜಿತ ಆಸ್ತಿಯಲ್ಲ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದೇನೆ. ಕಾಂಗ್ರೆಸ್‌ನಲ್ಲೇ ಇರುತ್ತೇನೆ. ಬಿಜೆಪಿಗೆ ಹೋಗುವುದು ವದಂತಿ’ ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮ ಅಧ್ಯಕ್ಷ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಬಿಜೆಪಿಗೆ ಜಿಗಿಯುತ್ತೇನೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ ಎಂಬುದನ್ನು ಕೇಳಿದೆ. ನಾನು ಹಣ ನೋಡಿ ರಾಜಕೀಯ ಮಾಡುತ್ತಿಲ್ಲ. ಪದವಿ ನೋಡಿ ಶಾಸಕನಾಗಿಲ್ಲ. ಕ್ಷೇತ್ರದ ಜನರ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಅವರ ಆಶಯದಂತೆ ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಜನಪರ ಕೆಲಸ ಮಾಡುತ್ತಿದೆ. ಇಲ್ಲಿಯೇ ನನಗೆ ತೃಪ್ತಿ ಇದೆ. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್‌ ಕಮಲಕ್ಕೆ ಮುಂದಾಗಿರುವುದು ಅವರ ಅಧಿಕಾರ ದಾಹವನ್ನು ತೋರಿಸುತ್ತಿದೆ’ ಎಂದರು.

ADVERTISEMENT

‘ಕಾಂಗ್ರೆಸ್‌ನ ಮೂವರು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರ ಮನವೊಲಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ರಾಜಕೀಯದಲ್ಲಿ ಇದು ಸಹಜ. ಆದರೆ ಕಾಂಗ್ರೆಸ್‌ನ 13 ಶಾಸಕರು ಬಿಜೆಪಿ ಸೇರುವುದು ಸುಳ್ಳು. ಇದು ಸಾಧ್ಯವಿಲ್ಲದ ಮಾತು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.