ADVERTISEMENT

ನನಗೆ ಪಕ್ಷ ಬೆಂಬಲ ನೀಡುತ್ತಿಲ್ಲ: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಲು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 21:25 IST
Last Updated 1 ಮಾರ್ಚ್ 2021, 21:25 IST
ಪುಲಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಪುಲಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ   

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನ್ನನ್ನು ಗುರಿ ಮಾಡುತ್ತಿದ್ದು, ನನಗೆ ಪಕ್ಷದಿಂದ ಬೆಂಬಲ ಸಿಗುತ್ತಿಲ್ಲ’ ಎಂದು ಪುಲಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.

ಶಾಸಕರ ಭವನದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಪಕ್ಷ ನನ್ನ ಬೆಂಬಲಕ್ಕೆ ಬಾರದೇ ಇದ್ದರೂ, ನಾನೇ ಸಂಪತ್ ರಾಜ್ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗವುದಿಲ್ಲ’ ಎಂದ ಅವರು, ‘ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಡಿ.ಕೆ.ಶಿವಕುಮಾರ್ ವಿರುದ್ಧ ನಾನು ದೂರು ನೀಡುತ್ತೇನೆ’ ಎಂದರು.

‘ಮಾಜಿ ಶಾಸಕ ಪ್ರಸನ್ನ ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ ಎಂದು ಹೇಳಿದ್ದೆ. ಆದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಒಬ್ಬ ಹಾಲಿ ಶಾಸಕ ಇರಬೇಕಾದರೆ ಮತ್ತೊಬ್ಬ ನಾಯಕನನ್ನು ಕರೆದುಕೊಂಡು ಬಂದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಗುಂಪುಗಾರಿಕೆಗೆ ಅವಕಾಶ ಆಗುವುದು ಸಹಜ’ ಎಂದರು.

ADVERTISEMENT

‘ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನನ್ನನ್ನು ಕರೆದು ಮಾತನಾಡಿಲ್ಲ. ಪ್ರಕರಣವನ್ನು ಶಿಸ್ತು ಸಮಿತಿಗೆ ಒಪ್ಪಿಸಿದ್ದಾರೆ. ನನಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವುದಾಗಿ ದೆಹಲಿಯಲ್ಲಿಯೂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.