ADVERTISEMENT

2 ತಿಂಗಳಲ್ಲಿ ಐಬಿಎಂ ಮೈಸೂರು ಕ್ಯಾಂಪಸ್‌: ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 19:43 IST
Last Updated 8 ನವೆಂಬರ್ 2021, 19:43 IST
ಡಾ.ಸಿ.ಎನ್.‌ ಅಶ್ವತ್ಥನಾರಾಯಣ
ಡಾ.ಸಿ.ಎನ್.‌ ಅಶ್ವತ್ಥನಾರಾಯಣ   

ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್‌ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ ‘ಕ್ಲೈಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಕೇಂದ್ರವು ಮೈಸೂರಿನಿಂದ ‌ಚಟುವಟಿಕೆ ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹ ಮೈಸೂರಿನಲ್ಲೂ ಕಚೇರಿ ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕ್ಷಿಪ್ರ ಮತ್ತು ಹೈಟೆಕ್ ಆರ್ಥಿಕತೆಯ ಬೆಳವಣಿಗೆಗೆ ನೆರವಾಗಲಿದೆ’ ಎಂದರು.

‘ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್‌ನ (ಕೆಡಿಇಎಂ) ಸ್ಪೋಕ್-ಶೋರ್ ನೀತಿಯಡಿಯಲ್ಲಿ 2025ರ ವೇಳೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. 2026ರ ವೇಳೆಗೆ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ಕ್ಲಸ್ಟರ್‌ಗಳಲ್ಲಿ 5 ಸಾವಿರ ಐಟಿ ಕಂಪನಿಗಳು ಮತ್ತು ನವೋದ್ಯಮಗಳು ನೆಲೆಯೂರುವಂತೆ ಮಾಡಲಾಗುವುದು’ ಎಂದು ಅವರು ವಿವರಿಸಿದರು.

ADVERTISEMENT

ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, ‘ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯಡಿ 2025ರ ವೇಳೆಗೆ ರಾಜ್ಯಕ್ಕೆ ಕನಿಷ್ಠ 100 ಕಂಪನಿಗಳ ಗ್ಲೋಬಲ್ ಕೆಪಾಸಿಟಿ ಸೆಂಟರ್‌ಗಳನ್ನು (ಜಿಸಿಸಿ) ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದರು.

ಐಬಿಎಂನ ವ್ಯವಸ್ಥಾಪಕ ಪಾಲುದಾರ ಅಮಿತ್ ಶರ್ಮಾ ಮಾತನಾಡಿ, ‘ಮೈಸೂರು ಸಿಐಸಿ ಕೇಂದ್ರವು ಭವಿಷ್ಯದ ತಂತ್ರಜ್ಞಾನ ವಲಯಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಮುಖ್ಯ ಪಾತ್ರ ವಹಿಸಲಿದೆ. ಈ ಆರ್ಥಿಕ ವರ್ಷದ ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ 10 ಸಾವಿರ ಜನರನ್ನು ನೇಮಿಸಿಕೊಳ್ಳಲಾಗುವುದು. ಇದರಿಂದಾಗಿ ಐಬಿಎಂ ಕಂಪನಿಯು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ), ಹೈಬ್ರಿಡ್ ಕ್ಲೌಡ್ ಮುಂತಾದ ಕ್ಷೇತ್ರಗಳಲ್ಲಿ ಹೊಂದಿರುವ ಪರಿಣತಿಯು ಮತ್ತಷ್ಟು ಹೆಚ್ಚಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.