ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಗೆ ಮಾನ, ಮರ್ಯಾದೆ ಇದ್ದರೆ ಜನಾಕ್ರೋಶ ಎಂಬ ನಾಟಕವನ್ನು ಬಂದ್ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಗುರುವಾರ ಎಕ್ಸ್ನಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ಬಿಜೆಪಿ ರಾಜ್ಯದಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದೇಶದಲ್ಲಿ ಬೆಲೆಯೇರಿಕೆಯಾಗಿದ್ದರೆ ಅದಕ್ಕೆ ಕೇಂದ್ರದ ಬಿಜೆಪಿಯೇ ನೇರ ಕಾರಣ. ಮನಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದುಬಾರಿ ಇದ್ದಾಗಲೂ ಪೆಟ್ರೋಲ್ ಬೆಲೆ ₹73 ಹಾಗೂ ಡೀಸೆಲ್ ಬೆಲೆ ₹46 ಇತ್ತು. ಇಂದು ಅವುಗಳ ಬೆಲೆ ಎಷ್ಟಾಗಿದೆ? ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಬ್ಯಾರಲ್ಗೆ ಸುಮಾರು 35 ಡಾಲರ್ ಇಳಿದಿದೆ. 120 ಡಾಲರ್ ಇರುವಾಗ ಪೆಟ್ರೋಲ್ ಬೆಲೆ 73, ಡೀಸೆಲ್ ಬೆಲೆ 46 ರೂ.ಗಳಿದ್ದರೆ, ಇಂದು ₹90 ಗಳಿಗಿಂತ ಹೆಚ್ಚು ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಕಾರಣ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಇದ್ದನ್ನು ಕೇಳಬೇಕು. ಆಗ ಗ್ಯಾಸ್ ಸಿಲಿಂಡರ್ ಬೆಲೆ ₹420 ರೂ ಇತ್ತು, ಈಗ ಸಾವಿರ ರೂಪಾಯಿಗೆ ಏರಿದೆ. ಅವರ ಆಡಳಿತದ ತಪ್ಪುಗಳನ್ನು ಮುಚ್ಚಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜನಾಕ್ರೋಶ ಯಾತ್ರೆ ಕೈಗೊಂಡಿದೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ಲಜ್ಜೆಗೆಟ್ಟವರು. 2008, 2018 ರಲ್ಲಿ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಆಪರೇಶನ್ ಕಮಲ ಮಾಡಿ ಅಧಿಕಾರಕ್ಕೆ ಬಂದವರು ನಮಗೆ ಪಾಠ ಹೇಳಲು ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.