ಬೆಂಗಳೂರು: ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಡಲಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಕಿಡಿಕಾರಿದ್ದಾರೆ.
ಇದಕ್ಕೂ ಮುನ್ನ ಮಸ್ಕಿಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.