ನಾಗಮಂಗಲ (ಮಂಡ್ಯ ಜಿಲ್ಲೆ): ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಕಳಿಯಲ್ಲಿ ನಾನು ಖರೀದಿಸಿರುವ ಭೂಮಿ ₹ 100 ಕೋಟಿ ಬೆಲೆ ಬಾಳುತ್ತದೆ ಎಂದು ಕತೆ ಕಟ್ಟಲಾಗುತ್ತಿದೆ. ಯಾರಾದರೂ ₹ 20 ಕೋಟಿ ಕೊಟ್ಟರೆ ಆಸ್ತಿ ಬಿಟ್ಟುಬಿಡುತ್ತೇನೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ನನ್ನ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಲಿಲ್ಲ ಎಂದರೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಊಟ ಸೇರುವುದಿಲ್ಲ, ನಿದ್ದೆ ಬರುವುದಿಲ್ಲ. ರಾಜರಿಂದ ದಾನ ಬಂದಿದ್ದ ಜಮೀನನ್ನು ನಾನು ಖಾಸಗಿ ಮಾಲೀಕರಿಂದ ಖರೀದಿಸಿದ್ದೇನೆ. ಕೆರೆ ಜಾಗ ಒತ್ತುವರಿ ಮಾಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು’ ಎಂದರು.
‘ಬರ ಪರಿಹಾರ ವಿತರಣೆಗಾಗಿ ಶೀಘ್ರ ₹ 6,663 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೋರಿದ್ದೇವೆ. ಅಂಕಿ ಅಂಶಗಳ ಸಹಿತ ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೂ ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.