ಪ್ರಿಯಾಂಕ್ ಖರ್ಗೆ ಮತ್ತು ಆರ್. ಅಶೋಕ
ಬೆಂಗಳೂರು: ‘ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಆ ಬಗ್ಗೆ ದಾಖಲೆಗಳಿದ್ದರೆ ವಿಧಾನಮಂಡಲದ ಅಧಿವೇಶನದಲ್ಲಿ ಸಲ್ಲಿಸಿ, ಚರ್ಚೆಗೆ ಮುಂದಾಗಲಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ ನಾಯಕರು ಯಾವುದೇ ದಾಖಲೆಗಳನ್ನು ಕೊಟ್ಟಿಲ್ಲ. ವಿರೋಧ ಪಕ್ಷಗಳು ಕೇವಲ ಆರೋಪಗಳಿಂದ ರಾಜಕೀಯ ಮಾಡುತ್ತಿವೆಯೇ ಹೊರತು, ಸಾಕ್ಷ್ಯಗಳನ್ನು ಒದಗಿಸುವುದಿಲ್ಲ’ ಎಂದು ಟೀಕಿಸಿದರು.
‘ಸಾವಿರಾರು ಕೋಟಿ ರೂಪಾಯಿ ಮೊತ್ತದ ಹಗರಣ ಆಗಿದೆ ಎಂದು ಯಾವುದೇ ದಾಖಲೆಗಳಿಲ್ಲದೆ ಆರೋಪಿಸುತ್ತಿರುವ ಬಿಜೆಪಿಯವರಿಂದ, ಈ ಹಿಂದೆ ಮಾಡಿದ್ದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ’ ಎಂದು ಕಿಡಿಕಾರಿದರು.
ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸಿಬಿಐಗೆ ಕೊಡಿ ಎಂದು ಹೇಳುವ ಮೊದಲು ರಾಜ್ಯದಲ್ಲಿ ನಡೆದ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿದರೆ ಅಗತ್ಯವಿರುವ ಸಿಬ್ಬಂದಿ ಸೇರಿದಂತೆ ಸಂಪನ್ಮೂಲಗಳನ್ನೂ ಕೊಡಬೇಕೆಂದು ಮುಖ್ಯ ಕಾರ್ಯದರ್ಶಿಗೆ ಈ ಹಿಂದೆ ಸಿಬಿಐ ಬರೆದಿದ್ದ ಪತ್ರವನ್ನು ಬಿಜೆಪಿಯವರು ನೋಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.