ADVERTISEMENT

ಅಕ್ರಮವಾಗಿ ಅದಿರು ಸಾಗಣೆ: ಆರೋಪಿ, ಶಾಸಕ ಸೈಲ್‌ಗೆ ವೈದ್ಯಕೀಯ ಜಾಮೀನು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 21:23 IST
Last Updated 5 ಫೆಬ್ರುವರಿ 2026, 21:23 IST
ಸತೀಶ್ ಸೈಲ್
ಸತೀಶ್ ಸೈಲ್   

ಬೆಂಗಳೂರು: ‘ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ಈ ಮೊದಲು ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಹೈಕೋರ್ಟ್‌ ಕಾಯಂಗೊಳಿಸಿದೆ.

ಸತೀಶ್‌ ಸೈಲ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಕುರಿತಂತೆ ಆದೇಶಿಸಿದೆ.

‘ಸತೀಶ್‌ ಸೈಲ್‌ ಅವರು ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ನೀಡಬೇಕು. ಲಿವರ್ ಕಸಿ ಬಗ್ಗೆ ಎರಡು ವಾರಗಳಲ್ಲಿ ಮಾಹಿತಿ ಒದಗಿಸಬೇಕು. ವೈದ್ಯಕೀಯ ಸ್ಥಿತಿಗತಿ ಕುರಿತು ಎಂಟು ವಾರಕ್ಕೊಮ್ಮೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು’ ಎಂಬುದೂ ಸೇರಿದಂತೆ ಇತರೆ ಷರತ್ತುಗಳನ್ನು ವಿಧಿಸಿದೆ.

ADVERTISEMENT

‘ಸೈಲ್‌ ಅವರನ್ನು ಹಲವು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಯಕೃತ್‌ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಿರುವ ಬಗ್ಗೆ ದೃಢಪಡಿಸಿದ್ದಾರೆ. ಅವರಿಗೆ ಲಿವರ್‌ ಕಸಿ ಮಾಡಬೇಕಿದೆ ಎಂದು ತಿಳಿಸಿ ನ್ಯಾಯಾಲಯಕ್ಕೆ ವರದಿ ಹಾಗೂ ದಾಖಲೆ ಸಲ್ಲಿಸಲಾಗಿದೆ. ಅವರು ಜೈಲಿನಲ್ಲಿ ಇದ್ದುಕೊಂಡು ಲಿವರ್ ಕಸಿಗೆ ಒಳಗಾಗಿ ನಂತರ ಕಾಲಕಾಲಕ್ಕೆ ಚಿಕಿತ್ಸೆ ಪಡೆಯುವುದು ಕಷ್ಟವಾಗಲಿದೆ. ಹಾಗಾಗಿ, ಷರತ್ತುಬದ್ಧ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಕೋರಿಕೆ ಏನಿತ್ತು?

‘ಅಕ್ರಮ ಹಣ ವರ್ಗಾವಣೆ ಆರೋಪದಡಿ ಇ.ಡಿ ದಾಖಲಿಸಿರುವ ಇಸಿಐಆರ್‌ಗೆ (ಜಾರಿ ನಿರ್ದೇಶನಾಲಯ ಪ್ರಕರಣದ ಮಾಹಿತಿ ವರದಿ) ಸಂಬಂಧಿಸಿದಂತೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಜನಪ್ರತಿನಿಧಿಗಳ ಸೆಷೆನ್ಸ್‌ ನ್ಯಾಯಾಲಯ ರದ್ದುಪಡಿಸಿದೆ ಹಾಗೂ ಜಾಮೀನು ರಹಿತ ಬಂಧನದ ವಾರಂಟ್‌ ಹೊರಡಿಸಿದೆ. ನಾನು ಜಠರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ನಿಯಮಿತ (ರೆಗ್ಯುಲರ್‌) ಜಾಮೀನು ನೀಡಬೇಕು’ ಎಂದು ಸೈಲ್‌ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.