ADVERTISEMENT

ಅನಧಿಕೃತ ಶಾಲೆ: ಪಿಐಎಲ್‌ ಆಗಿ ಪರಿವರ್ತನೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 16:04 IST
Last Updated 15 ಏಪ್ರಿಲ್ 2024, 16:04 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ತ್ಯಾಗರಾಜನಗರದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜಿಎಸ್‌ ಬ್ಲೂಮ್‌ಫೀಲ್ಡ್‌ ಶಾಲೆ ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಬೇಕು’ ಎಂದು ಕೋರಿರುವ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ (ಪಿಐಎಲ್‌) ಪರಿವರ್ತಿಸಿದೆ.

‘ನಕ್ಷೆ ಮಂಜೂರಾತಿ ಇಲ್ಲದೆ ಹಾಗೂ ಪ್ರವಾಹದ ನೀರು ಹರಿಯುವ ಸ್ಥಳದಲ್ಲಿ ಶಾಲಾ ಕಟ್ಟಡ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಡವಲು ಬಿಬಿಎಂಪಿ ಆದೇಶಿಸಿದೆ. ಈ ಆದೇಶ ಯಾವಾಗ ಬೇಕಾದರೂ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಶಾಲೆಯನ್ನು ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ವಕೀಲೆ ಸುಧಾ ಕಾಟ್ವಾ ಈ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕದಸದಸ್ಯ ನ್ಯಾಯಪೀಠ, ‘ಈ  ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿಯಾಗಿ ಪರಿವರ್ತಿಸುವುದು ಸೂಕ್ತ. ಅದರಂತೆ ಅರ್ಜಿಯನ್ನು ಸಂಬಂಧಪಟ್ಟ ವಿಭಾಗೀಯ ಪೀಠದ ಮುಂದೆ ಹೆಚ್ಚಿನ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ರಿಜಿಸ್ಟ್ರಿಗೆ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.