ಬೆಂಗಳೂರು: ಒಂದು ಲಕ್ಷ ಷೇರುದಾರರಿಂದ ₹ 4,000 ಕೋಟಿ ದೋಚಿ, ವಂಚಿಸಿದ ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿ ಪರ ವರದಿ ಕೊಡಲು ₹ 4.5 ಕೋಟಿ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್ ಅವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.
‘ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಅಂತೆಯೇ, ಅಮಿತ್ ಶಾ ವಿರುದ್ಧದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಮಹತ್ತರವಾದ ಕ್ರಿಮಿನಲ್ ಪ್ರಕರಣಗಳಲ್ಲಿ ವ್ಯಾಪಕ ಸಾರ್ವಜನಿಕ ಹಿತಾಸಕ್ತಿ ಅಡಗಿರುವಾಗ ಎರಡು ಎಫ್ಐಆರ್ ದಾಖಲು ಮಾಡಿದ್ದರೆ ಅದು ತಪ್ಪೇನಲ್ಲ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ, ಸಿಬಿಐ ದಾಖಲಿಸಿರುವ ಎಫ್ಐರ್ ಕಾನೂನು ಬದ್ಧವಾಗಿದೆ" ಎಂದು ಅಭಿಪ್ರಾಯಪಟ್ಟು ನಾಗರಾಜ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ಹಾಗೂ ಎಲ್.ಸಿ. ನಾಗರಾಜ್ ಪರ ಹಿರಿಯ ವಕೀಲ ಸಿ.ಎಚ್. ಜಾಧವ್ ವಾದ ಮಂಡಿಸಿದ್ದರು.
ಈ ಪ್ರಕರಣದಲ್ಲಿ ನಾಗರಾಜ್ ಅವರನ್ನು ಎಸ್ಐಟಿ ಅಧಿಕಾರಿಗಳು ಈ ಮೊದಲು ಬಂಧಿಸಿದ್ದರು. ಈ ಪ್ರಕರಣದಲ್ಲಿ ಇನ್ನೂ ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡಲಾಗಿರುವುದನ್ನು ಸ್ಮರಿಸಬಹುದು.
ನಾಗರಾಜ್, ಐಎಂಎ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೊದಲ ಸರ್ಕಾರಿ ಅಧಿಕಾರಿ. ಕೆಎಎಸ್ 1998ನೇ ಬ್ಯಾಚ್ಗೆ ಸೇರಿದ ಇವರು, ಮೂರು ಕಂತುಗಳಲ್ಲಿ ಲಂಚ ಪಡೆದ ಆರೋಪಕ್ಕೆ ಒಳಗಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.