ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಕ್ರಮ ಜರುಗಿಸಿರುವ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ(ಇ.ಡಿ) ಹೈಕೋರ್ಟ್ ಸೂಚನೆ ನೀಡಿದೆ.
ಐ ಮಾನಿಟರಿಂಗ್ ಅಡ್ವೈಸರಿ(ಐಎಂಎ) ಹಗರಣದಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಕಾಯ್ದೆಯಡಿ(ಕೆಪಿಐಡಿ) ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರದಿಂದ ಬೇಗ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪಿಎಂಎಲ್ ಕಾಯ್ದೆಯಡಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ, ಇತ್ತೀಚೆಗೆ ಶೋಧ ನಡೆಸಿದೆ. ಇದು ಸಕ್ಷಮ ಪ್ರಾಧಿಕಾರದ ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಗಮನಿಸಿದ ಪೀಠ, ಈ ಆದೇಶ ನೀಡಿತು.
ಇ.ಡಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲಾಗದು. ಆದರೆ, ಎರಡು ತನಿಖಾ ಸಂಸ್ಥೆಗಳೇ ಆಗಿರುವುದರಿಂದ ಪರಸ್ಪರ ಸಹಕಾರ ನೀಡುವ ಅವಶ್ಯಕತೆ ಇದೆ. ಹೀಗಾಗಿ, ವರದಿ ಸಲ್ಲಿಸಬೇಕು ಎಂದು ಪೀಠ ನಿರ್ದೇಶನ ನೀಡಿತು.
ಈ ಮಧ್ಯೆ, ಆಸ್ತಿ ಮುಟ್ಟುಗೋಲು ಆದೇಶ ದೃಢೀಕರಿಸಲು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇದೆ ಎಂದು ಪ್ರಾಧಿಕಾರ ತಿಳಿಸಿತು. ಈ ಅರ್ಜಿಯನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ಪೀಠ, ಇದೇ ವೇಳೆ ನಿರ್ದೇಶನ ನೀಡಿತು. ನ್ಯಾಯಾಲಯ ದೃಢೀಕರಿಸಿದ ಬಳಿಕವೇ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿ ಮಾರಾಟ ಮಾಡಬಹುದು ಎಂದು ಪೀಠ ಹೇಳಿತು. ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.