ಬೆಂಗಳೂರು: ‘ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ವರಿಷ್ಠರ ಅನುಮತಿ ಮತ್ತು ಸಹಮತಿ ಸಿಕ್ಕಿದ ತಕ್ಷಣ ಸಂಪುಟ ವಿಸ್ತರಣೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಶನಿವಾರ ಬೆಳಿಗ್ಗೆ ಮಾತನಾಡಿದ ಅವರು. ‘ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಅವರು ಪ್ರಧಾನಿ ಜೊತೆಗ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ನಿರೀಕ್ಷೆ ಇದೆ’ ಎಂದರು.
ದೆಹಲಿ ಭೇಟಿ ಅತ್ಯಂತ ಯಶಸ್ವಿ: ‘ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಿದ್ದೇನೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸವಿದೆ’ ಎಂದರು.
‘ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ. ಎಲ್ಲರೂ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಬಾರಿಯ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ’ ಎಂದೂ ಯಡಿಯೂರಪ್ಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.