ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳು ಹಾಗೂ ಲೇವಾದೇವಿದಾರರಿಂದ ಹಿಂಸೆ, ಕಿರುಕುಳಕ್ಕೆ ಒಳಗಾಗಿರುವ ಸಾಲಗಾರರ ಹಿತರಕ್ಷಣೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಕಠಿಣ ಕಾನೂನು ಜಾರಿಗೊಳಿಸಲು ತೀರ್ಮಾನಿಸಿದೆ.
ಸಾಲ ಪಡೆದವರ ಮೇಲೆ ಕಂಪನಿಗಳ ಪ್ರತಿನಿಧಿಗಳು ನಡೆಸುತ್ತಿರುವ ದೌರ್ಜನ್ಯ ಪ್ರಕರಣಗಳು ರಾಜ್ಯದಾದ್ಯಂತ ವರದಿಯಾಗಿದ್ದವು. ಇದನ್ನು ತಡೆಯಲು ಸರ್ಕಾರ ಕ್ರಮವಹಿಸಬೇಕೆಂಬ ಆಗ್ರಹಗಳೂ ದಿನೇ ದಿನೇ ಹೆಚ್ಚುತ್ತಿದ್ದವು. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉನ್ನತಮಟ್ಟದ ಸಭೆ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರಿಂದ ಸಾಲ ಪಡೆಯುವವರ ಹಿತ ಕಾಪಾಡಲು ಆದಷ್ಟು ಶೀಘ್ರವಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ತರಲಾಗುವುದು. ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
‘ಬಲವಂತದ ಸಾಲ ವಸೂಲಾತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮತ್ತು ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗುವುದು. ಜೊತೆಗೆ, ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ನೋಂದಣಿ ಆಗದ ಲೇವಾದೇವಿದಾರರನ್ನು ನಿಯಂತ್ರಿಸಲು ಕೂಡಾ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು’ ಎಂದರು.
‘ಆರ್ಬಿಐ, ನಬಾರ್ಡ್ ಮತ್ತು ಮೈಕ್ರೊ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಅಭಿಪ್ರಾಯ ಕೇಳಿದ್ದೇನೆ’ ಎಂದು ತಿಳಿಸಿದ ಮುಖ್ಯಮಂತ್ರಿ, ‘ಯಾರೂ ಸಾಲ ಕೊಡಬೇಡಿ, ವಸೂಲು ಮಾಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ, ವಸೂಲು ಮಾಡುವಾಗ ಕಿರುಕುಳ ನೀಡಬಾರದು. ಅಲ್ಲದೆ, ಆರ್ಬಿಐ ನಿಯಮ ಪಾಲಿಸುವಂತೆ ಸೂಚನೆ ನೀಡಿದ್ದೇನೆ. ಸಂಜೆ 5 ಗಂಟೆ ಬಳಿಕ ಸಾಲ ವಸೂಲಾತಿಗೆ ಮನೆಗೆ ಹೋಗಬಾರದು. ಹೊರಗುತ್ತಿಗೆ ಮೂಲಕ, ಅಂದರೆ ರೌಡಿಗಳನ್ನು, ಗೂಂಡಾಗಳನ್ನು ಬಳಸಿ ಸಾಲ ವಸೂಲಿ ಮಾಡಬಾರದೆಂದು ಸೂಚನೆ ನೀಡಿದ್ದೇನೆ’ ಎಂದರು.
‘ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ ಎಂದೂ ಗಮನಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ, ಸಾರ್ವಜನಿಕರಿಗೆ ಸೂಕ್ತ ತಿಳಿವಳಿಕೆ ಹಾಗೂ ಮೈಕ್ರೊ ಫೈನಾನ್ಸ್ನವರಿಗೆ ಎಚ್ಚರಿಕೆ ನೀಡಬೇಕು’ ಎಂದರು.
ಕೇಂದ್ರಕ್ಕೆ ಪತ್ರ: ‘ಮೈಕ್ರೊ ಫೈನಾನ್ಸ್ ಕಂಪನಿಗಳು ಆರ್ಬಿಐ ಅಡಿ ಬರುತ್ತವೆ. ಸಾಲಗಾರರಿಗೆ ಕಿರುಕುಳ ತಪ್ಪಿಸಲು ಕಾನೂನು ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದು ಒತ್ತಾಯಿಸಲಾಗುವುದು. ಅನಿಯಂತ್ರಿತ ಲೇವಾದೇವಿ ಚಟುವಟಿಕೆಯನ್ನು ನಿಷೇಧಿಸುವ ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಅವರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ದೂರು ಸಲ್ಲಿಕೆಗೆ ಸಹಾಯವಾಣಿ
ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಿ ದೂರು ದಾಖಲಿಸಲು ಹಾಗೂ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
‘ಸಾಲಗಾರರ ಹಿತರಕ್ಷಣೆಗಾಗಿ ಆಂಧ್ರಪ್ರದೇಶದಲ್ಲಿ ಈಗಾಗಲೇ ಕಾನೂನು ಜಾರಿಯಲ್ಲಿದೆ. ಅಲ್ಲಿನ ಕಾನೂನು ಸೇರಿದಂತೆ ಇತರ ರಾಜ್ಯಗಳಲ್ಲಿನ ಕಾನೂನುಗಳನ್ನು ಪರಿಶೀಲಿಸುತ್ತೇವೆ. ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯ ಪೊಲೀಸರಿಗೆ ದೂರು ನೀಡಬೇಕು’ ಎಂದರು.
*ಶೇ 17.07 ಬಡ್ಡಿ ವಿಧಿಸಲು ಆರ್ಬಿಐ ಅವಕಾಶ ಕೊಟ್ಟಿದೆ; ನೀವು ಶೇ 28ರಷ್ಟು ಬಡ್ಡಿ ವಸೂಲಿ ಮಾಡುವುದೇಕೆ?
* ನಿಯಮಬಾಹಿರವಾಗಿ ಸಾಲ ವಸೂಲಿಗೆ ಇಳಿಯುವ ಸಿಬ್ಬಂದಿ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ?
* ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?
* ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು? * ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ?
* ಆರ್ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ?
* ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?
* ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ಕೊಟ್ಟು ಸಾಲ ಪಡೆಯವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ?
* ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ?
* ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ಸಹಿಸುವುದಿಲ್ಲ.
‘ಆರ್ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರವಾಗಿ ಸಾಲ ವಸೂಲಿ ಮಾಡುತ್ತಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು’ ಎಂದು ಮೈಕ್ರೊ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಾದ ಕೃಷ್ಣ ಬೈರೇಗೌಡರು ಎಚ್.ಕೆ. ಪಾಟೀಲ ‘ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯಿದೆ. ನಿಯಮ ಉಲ್ಲಂಘಿಸುವ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ’ ಎಂದು ಗುಡುಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.