ಹುಬ್ಬಳ್ಳಿ: ‘ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳಲ್ಲಿ ಎರಡು ಅಥವಾ ಮೂರು ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಕ್ಕೆ ತಂದರೆ, ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ’ ಎಂದು ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.
ನಗರದ ಕೇಶ್ವಾಪುರ ಬಳಿಯ ರಾಯ್ಕರ್ ಅತಿಥಿಗೃಹದಲ್ಲಿ ‘ಹುಧಾ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ‘ಆತ್ಮಾವಲೋಕನ ಸಭೆ’ಯಲ್ಲಿ ಅವರು ಮಾತನಾಡಿದರು.
‘ಚುನಾವಣಾ ಪೂರ್ವ ಗ್ಯಾರಂಟಿ ಮೂಲಕ ಭರವಸೆ ನೀಡಿರುವ ದೇಶದ ಐಕೈಕ ಪಕ್ಷ ಕಾಂಗ್ರೆಸ್. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವುಗಳ ಅನುಷ್ಠಾನಕ್ಕೆ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಿದ್ದಾರೆ. ಬಜೆಟ್ ಹೊಂದಾಣಿಕೆ ಲೆಕ್ಕಾಚಾರ ನಡೆಯುತ್ತಿದ್ದು, ಶೀಘ್ರ ಭರವಸೆಗಳು ಈಡೇರಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತರೂ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ದೆಲ್ಲಿಯಲ್ಲಿದ್ದ ಬಿಜೆಪಿ ವರಿಷ್ಠರು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಸೋತ ಬಳಿಕ ಶೆಟ್ಟರ್ ಖಿನ್ನತೆಗೆ ಒಳಗಾಗುತ್ತಾರೆ, ಹೊರಗಡೆ ಬರುವುದಿಲ್ಲ ಎಂದು ಬಿಜೆಪಿಯ ಕೆಲವು ಮುಖಂಡರು ಭಾವಿಸಿದ್ದರು. ಆದರೆ, ಇದೀಗ ನಾನೇ ಅವರನ್ನು ಖಿನ್ನತೆಗೆ ದೂಡಿದ್ದೇನೆ’ ಎಂದು ಹೇಳಿದರು.
‘ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಬದ್ಧನಾಗಿ ಪಕ್ಷ ಸೇರ್ಪಡೆಯಾಗಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಲು ನಿರ್ಧರಿಸಿದ್ದು, ವಹಿಸುವ ಜವಾಬ್ದಾರಿ ನಿಭಾಯಿಸುವುದಾಗಿ ಮುಖಂಡರಿಗೆ ಹೇಳಿದ್ದೇನೆ. ರಾಜ್ಯ ವಿಧಾನಸಭಾ ಚುನಾವಣೆ ಸೆಮಿ ಫೈನಲ್ ಆಗಿದ್ದು, ಮುಂದೆ ಲೋಕಸಭಾ ಚುನಾವಣೆಯ ಫೈನಲ್ ಪಂದ್ಯವಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.