ADVERTISEMENT

ಪಳೆಯುಳಿಕೆ ಇಂಧನ‌ ಶೋಧ ಹೆಚ್ಚಿಸಿ: ಹೂಡಿಕೆದಾರರಿಗೆ ಪ್ರಧಾನಿ ಮೋದಿ ಕರೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 8:09 IST
Last Updated 6 ಫೆಬ್ರುವರಿ 2023, 8:09 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಭಾರತದಲ್ಲಿ ಪಳೆಯುಳಿಕೆ ಇಂಧನ ಮೂಲಗಳ ಶೋಧ ಮತ್ತು ಉತ್ಪಾದನೆಯಲ್ಲಿ ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ ಮೋದಿ ಕರೆ ನೀಡಿದರು.

ಇಲ್ಲಿನ ಮಾದಾವರದ ಬಳಿ ಇರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಸೋಮವಾರ ಆರಂಭವಾದ ಭಾರತೀಯ ಇಂಧನ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಹೂಡಿಕೆಗೆ ಮುಕ್ತ ಅವಕಾಶಗಳಿವೆ. ಈವರೆಗೂ ನಿರ್ಬಂಧಿತವಾಗಿದ್ದ ಹತ್ತು ಲಕ್ಷ ಚದರ ಕಿಲೋಮೀಟರ್ ಪ್ರದೇಶವನ್ನು ಹೂಡಿಕೆ ಚಟುವಟಿಕೆಗಳಿಗೆ ಮುಕ್ತಗೊಳಿಸಲಾಗಿದೆ. ಹಸಿರು ಇಂಧನ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹೂಡಿಕೆದಾರರು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದರು.

ADVERTISEMENT

ದೇಶದಲ್ಲಿ ಈಗ ಸ್ಥಿರವಾದ ಸರ್ಕಾರ ಇದೆ. ಗಟ್ಟಿಯಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕೆಳಸ್ತರದ ಜನರ ಜೀವನಮಟ್ಟ ಸುಧಾರಣೆಗೆ ಪೂರಕವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ದೇಶವು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಮೋದಿ ಹೇಳಿದರು.

ಮುಂದಿನ ದಿನಗಳಲ್ಲಿ ಎಲ್ ಪಿಜಿ ಬೇಡಿಕೆ ಶೇಕಡ 600ರಷ್ಟು ಹೆಚ್ಚಲಿದೆ. ಅದಕ್ಕೆ ಪ್ರತಿಯಾಗಿ ಇಂಧನ ಮೂಲಗಳ ಶೋಧ ಮತ್ತು ಉತ್ಪಾದನೆ ಹೆಚ್ಚಿಸಬೇಕಿದೆ. ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆಗೆ ಯೋಚಿಸಬೇಕು ಎಂದರು.

ವಿದ್ಯುತ್ ಪೂರೈಕೆಯಲ್ಲಿ ಸಮಗ್ರ ಸುಧಾರಣೆ ತರುವುದಕ್ಕಾಗಿ ಒಂದು ದೇಶ- ಒಂದು ವಿತರಣಾ ಜಾಲ ಯೋಜನೆಯನ್ನು ರೂಪಿಸಲಾಗಿದೆ. ಅದಕ್ಕಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿ‌ನ ಒತ್ತು ನೀಡಲಾಗಿದೆ ಎಂದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.