ADVERTISEMENT

ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚಿಸಿ: ಮುಕ್ತ ವಿವಿಗೆ ಡಾ.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಮೇ 2020, 11:12 IST
Last Updated 28 ಮೇ 2020, 11:12 IST
   

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ (ಗ್ರಾಸ್ ಎನ್‌ರೋಲ್‌ಮೆಂಟ್ ರೇಶ್ಯೊ) ಹೆಚ್ಚಿಸಲು ಅಗತ್ಯ ಕ್ರಮ ವಹಿಸಿ, ಕಾರ್ಯಸೂಚಿ ರೂಪಿಸಲು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ತರಬೇತಿ ಕಾರ್ಯಕ್ರಮಕ್ಕೆ ಆನ್‌ಲೈನ್‌ ಮೂಲಕ ಗುರುವಾರ ನಡೆದ ಸಮಾರೋಪದಲ್ಲಿ ಪಾಲ್ಗೊಂಡ ನಂತರ ಅವರು ಮಾತನಾಡಿದರು.

"ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ ಮುಖ್ಯವಾದ ಪಾತ್ರವಹಿಸಬೇಕು. ಈ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕಾರ್ಯಸೂಚಿ ರೂಪಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ,"ಎಂದು ತಿಳಿಸಿದರು.

ADVERTISEMENT

"ಮುಕ್ತ ವಿವಿ ವಿರುದ್ಧ ಹಣ ದುರ್ಬಳಕೆ ಸೇರಿದಂತೆ ಹಲವು ಆರೋಪಗಳಿದ್ದು, ಇಂತಹ ಕಳಂಕಗಳಿಂದ ಮುಕ್ತರಾಗಲು ಕ್ರಿಯಾ ಯೋಜನೆ ರೂಪಿಸಬೇಕು. ಉತ್ತಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸುವ ಜತೆಗೆ ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ ಮಾದರಿ ವ್ಯವಸ್ಥೆ ತರಲು ಆದೇಶಿಸಲಾಗಿದೆ," ಎಂದು ಅವರು ಹೇಳಿದರು.

ಕೆಸೆಟ್‌ ಆನ್‌ಲೈನ್‌ ತರಬೇತಿ
"ಕೊರೊನ ಲಾಕ್‌ಡೌನ್‌ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿದ್ದವರು ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದವರ ಅಭ್ಯಾಸಕ್ಕೆ ಅಡ್ಡಿಯಾಗದಂತೆ, ಆನ್‌ಲೈನ್‌ ಮೂಲಕ ತರಬೇತಿ ಮುಂದುವರಿಸಿದ್ದು ಶ್ಲಾಘನೀಯ. ಯುಪಿಎಸ್‌ಸಿ, ಕೆಪಿಎಸ್‌ಸಿ, ಕೆಸೆಟ್‌, ಯುಜಿಸಿ-ನೆಟ್‌, ಪಿಎಸ್‌ಐ, ಬ್ಯಾಂಕಿಂಗ್‌, ಶಿಕ್ಷಕರ ತರಬೇತಿ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿ ನಡೆಯುತ್ತಿರುವುದು ಮೆಚ್ಚುವ ವಿಷಯ ಎಂದು ಹೇಳಿದರು.

"ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಾನಾ ವಿಷಯ ತಜ್ಞರನ್ನು ಈ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಂಡು, ವಿದ್ಯಾರ್ಥಿಗಳಿಗೂ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿ ಕೆಸೆಟ್‌ ಪರೀಕ್ಷೆಗೆ ಉತ್ತಮ ತರಬೇತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಶುಭ ಕೋರುತ್ತೇನೆ,"ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.