ADVERTISEMENT

ಕಪ್ಪು ಬಾವುಟ ಪ್ರದರ್ಶನಕ್ಕೆ ಸಜ್ಜಾಗಿದ್ದ ಟಿಎಲ್‌ಬಿಸಿ ಕಾರ್ಮಿಕರ ಬಂಧನ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2018, 4:11 IST
Last Updated 15 ಆಗಸ್ಟ್ 2018, 4:11 IST
   

ರಾಯಚೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಸಜ್ಜಾಗಿದ್ದ ತುಂಗಭದ್ರಾ ಎಡದಂಡೆ ಕಾಲುವೆ ಹಂಗಾಮಿ ಕಾರ್ಮಿಕರನ್ನು ಪೊಲೀಸರು ಬಂಧಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟವಾಧಿ ಧರಣಿ ಬುಧವಾರ 37 ನೇ ದಿನಕ್ಕೆ ಕಾಲಿಟ್ಟಿದೆ. ಆಡಳಿತ ವರ್ಗ ಮತ್ತು ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಸ್ವಾತಂತ್ರ್ಯ ದಿನದಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಕುರಿತು ಟಿಯುಸಿಐ ಸಂಯೋಜಿತ ಮುಖಂಡರು ಈ ಮೊದಲೇ ಹೇಳಿಕೆ ನೀಡಿದ್ದರು.

ಇದರಿಂದ ಎಚ್ಚೆತ್ತುಕೊಂಡಿದ್ದ ಜಿಲ್ಲಾ ಪೊಲೀಸರು ಮಂಗಳವಾರ ಮಧ್ಯರಾತ್ರಿಯಿಂದಲೇ ಧರಣಿ ಸ್ಥಳದಲ್ಲಿ ನಿಗಾ ವಹಿಸಿದ್ದರು. ನೂರಾರು ಸಂಖ್ಯೆಯಲ್ಲಿದ್ದ ಕಾರ್ಮಿಕರನ್ನು 10 ಸರ್ಕಾರಿ ಬಸ್ ಗಳಲ್ಲಿ ಬಂಧಿಸಿ ಕರೆದೊಯ್ದರು. ಬಸ್ ಹತ್ತುವುದಕ್ಕೆ ನಿರಾಕರಿಸಿದ ಕಾರ್ಮಿಕರನ್ನು ಒತ್ತಾಯಪೂರ್ವಕವಾಗಿ ಪೊಲೀಸರು ಎಳೆದುಕೊಂಡು ತಂದು ಬಸ್ ಗೆ ಹಾಕಿದರು.

ADVERTISEMENT

ಬಸ್ ನೊಳಗಿಂದ ಕಾರ್ಮಿಕರು ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.

ಸಂಜೆ ವೇಳೆಗೆ ಕಾರ್ಮಿಕರನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.