ADVERTISEMENT

ಚೀನಾ ಜೊತೆ ಘರ್ಷಣೆ | ಪ್ರಧಾನಿ ಮೌನ ಸರಿಯಲ್ಲ ಎಂದ ಸಿದ್ದರಾಮಯ್ಯ

ಕಾಂಗ್ರೆಸ್‌ ಶಾಸಕಾಂಗ ಸಭೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 6:27 IST
Last Updated 18 ಜೂನ್ 2020, 6:27 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ಚೀನಾದೊಂದಿಗೆ ನಡೆದ ಘರ್ಷಣೆಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಅವರ ಮೌನ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗುರುವಾರ ಇಲ್ಲಿ ಆರಂಭವಾದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸೇನೆ ಅತ್ಯಂತ ಶಕ್ತಿಶಾಲಿಯಾಗಿದೆ. ಆದರೆ, ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿಯವರ ಮೌನ ಸರಿಯಲ್ಲ’ ಎಂದರು.

ನಮ್ಮ ಯೋಧರು ಹುತಾತ್ಮರಾಗಿದ್ದಾರೆ.‌ ಯೋಧರ ಶೌರ್ಯ, ತ್ಯಾಗ, ಬಲಿದಾನ ಸದಾ ಸ್ಮರಣೀಯ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.

ADVERTISEMENT

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಇದು ಮುಂದೆ ಕರಾಳ ಶಾಸನವಾಗಲಿದೆ.ಪಕ್ಷ ಮೊದಲಿನಿಂದಲೂ ಗೇಣಿದಾರರನ್ನು ರಕ್ಷಿಸಿಕೊಂಡು ಬಂದಿತ್ತು. ಇದರ ವಿರುದ್ಧ ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು. ಇದಕ್ಕೆ ಶಾಸಕರು ಸಿದ್ಧತೆ ಮಾಡಿಕೊಳ್ಳಬೇಕುಎಂದು ಹೇಳಿದರು.

ಪೆಟ್ರೋಲ್, ಡೀಸೆಲ್‌ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಕಚ್ಚಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಇದರಿಂದ ಪೆಟ್ರೋಲ್, ಡೀಸೆಲ್‌ ಲೀಟರ್ ಗೆ 25-30 ರೂ.‌ಪ್ರಕಾರ ಮಾರಾಟವಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ.ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಪ್ರಧಾನಿ ಮೋದಿಯವರು ದೇಶದ ಆರ್ಥಿಕತೆ ಮತ್ತು ಜನರ ಆರೋಗ್ಯವನ್ನು ಹಾಳು ಮಾಡಲು ಹೊರಟಿದೆ.ಕೇಂದ್ರ, ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದರು.

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಈಗ ದಿನಾಂಕ ನಿಗದಿಯಾಗಿದೆ. ಜುಲೈ 2 ರಂದು ಪದಗ್ರಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಶಾಸಕರು ಈ ಸಂಬಂಧ ತಮ್ಮ ಕ್ಷೇತ್ರಗಳಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿರುವ ಬಿ.ಕೆ. ಹರಿಪ್ರಸಾದ್, ನಸೀರ್ ಅಹಮದ್ ಅವರಿಗೆ ಆಭಿನಂದನೆ ಸಲ್ಲಿಸಿದ ಅವರು, ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.