ADVERTISEMENT

ಆಹ್ವಾನ ಪತ್ರಿಕೆಯಲ್ಲಿ ಕಾಂಗ್ರೆಸ್ಸಿಗರ ಹೆಸರು: ಚೀನಾ ಜತೆ ಏನು ಸಂಬಂಧ ಎಂದ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಆಗಸ್ಟ್ 2022, 9:52 IST
Last Updated 27 ಆಗಸ್ಟ್ 2022, 9:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಭಾರತ –ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಶನ್‌ (ಐಸಿಎಫ್‌ಎ) ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕರಿಗೆ ಆಹ್ವಾನ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಚೀನಾ ಜೊತೆಗಿನ ಗಡಿ ಸಮಸ್ಯೆ ಪ್ರಸ್ತಾಪಿಸುವ ರಾಹುಲ್ ಗಾಂಧಿ ಅವರಿಗೆ ತಮ್ಮದೇ ಪಕ್ಷದ ನಾಯಕರು ಭಾರತ –ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಶನ್‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾಣುತ್ತಿಲ್ಲವೇ’ ಎಂದು ಪ್ರಶ್ನಿಸಿದೆ.

‘ಟೀಕೆಗಳು ಕೇಳಿ ಬರುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನನ್ನ ಅನುಮತಿ ಇಲ್ಲದೆಯೇ ಹೆಸರು ಹಾಕಿದ್ದಾರೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಇದು ಹೇಗೆ ಸಾಧ್ಯ? ಕಾಂಗ್ರೆಸ್‌ ಪಕ್ಷದ ಪ್ರಭಾವಿ ಶಾಸಕರು, ಮಾಜಿ ಸಚಿವರೇ ಪ್ರಮುಖ ಆಹ್ವಾನಿತರಾಗಿರುವ ಈ ಕಾರ್ಯಕ್ರಮ ಕೆಪಿಸಿಸಿ ವತಿಯಿಂದಲೇ ಆಯೋಜನೆಗೊಂಡಿದ್ದೇ’ ಎಂದು ಬಿಜೆಪಿ ಟೀಕಿಸಿದೆ.

ADVERTISEMENT

ಸಿದ್ದರಾಮಯ್ಯ ಸ್ಪಷ್ಟನೆ: ಭಾರತ –ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಶನ್‌ ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.