
ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರುವರಿಯಲ್ಲಿ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಐದು ಕೆ.ಜಿ ಅಕ್ಕಿಯ ಜತೆಗೆ ಇಂದಿರಾ ಕಿಟ್ ಮೂಲಕ ತೊಗರಿ ಬೇಳೆ, ಸಕ್ಕರೆ, ಉಪ್ಪು ವಿತರಿಸಲಾಗುವುದು. ಅಕ್ಕಿ ವಿತರಣೆ ಪ್ರಮಾಣ ಹೆಚ್ಚಾಗಿದೆ. ಅಷ್ಟು ಪ್ರಮಾಣದಲ್ಲಿ ಅಕ್ಕಿ ಬಳಸುವುದಿಲ್ಲ ಎಂಬ ಕಾರಣಕ್ಕೆ ಇಂದಿರಾ ಕಿಟ್ ಯೋಜನೆ ಆರಂಭಿಸಲಾಗಿದೆ ಎಂದರು.
ಅನರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಕೂಡಲೇ ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರೆ 15 ದಿನಗಳ ಒಳಗೆ ಪಡಿತರ ಕಾರ್ಡ್ ವಿತರಿಸಲಾಗುತ್ತದೆ. ಆಸ್ತಿ ಹೊಂದಿರುವವರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂಬ ಆರೋಪ ಇದ್ದು, ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ಹೊರ ರಾಜ್ಯಗಳಿಗೆ ಪಡಿತರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಸಂಬಂಧ ಸುಮಾರು 574 ಮಂದಿಯನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಮುಂದೆ ಆ ರೀತಿ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.