ಬೆಂಗಳೂರು: ಇಂದಿರಾನಗರ ಮೊದಲನೇ ಹಂತದ ಆಟದ ಮೈದಾನದ ಅಭಿವೃದ್ಧಿ ಮತ್ತು ಉದ್ದೇಶಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಸಂಬಂಧ ಇಂದಿರಾನಗರ ಮೊದಲ ಹಂತದ ನಿವಾಸಿಗಳ ಸಂಘದ ಕಾರ್ಯದರ್ಶಿ ಸ್ವರ್ಣ ವೆಂಕಟರಾಮನ್ ಮತ್ತು ಜಂಟಿ ಕಾರ್ಯದರ್ಶಿ ಶಾನಿ ಸುನ್ನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮದ್ ನವಾಜ್ ನೇತೃತ್ವದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಹಾಗೂ ಸಂಬಂಧಿಸಿದ ಎಂಜಿನಿಯರ್ ಸೇರಿದಂತೆ ಎಲ್ಲ ಪ್ರತಿ ವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.
‘ಆಟದ ಮೈದಾನವನ್ನು ಒತ್ತುವರಿ ಮಾಡುವಂತಹ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಆಕ್ಷೇಪಿಸಿರುವ ಅರ್ಜಿದಾರರು ಪ್ರಸ್ತಾವನೆಯ ಮರುಪರಿಶೀಲನೆಗೆ ಕೋರಿರುವ ಕಾರಣ, ಈ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಬೇಕು’ ಎಂದು ನ್ಯಾಯಪೀಠ ಮಧ್ಯಂತರ ಆದೇಶದಲ್ಲಿ ವಿವರಿಸಿದೆ.
‘2024ರ ಆಗಸ್ಟ್ 14ರ ಟೆಂಡರ್ ಅಧಿಸೂಚನೆ ಅನುಸಾರ ಕಾಮಗಾರಿ ಕೈಗೊಂಡಿರುವ ಪ್ರತಿವಾದಿಗಳ ನಡೆಯನ್ನು ನಿರ್ಬಂಧಿಸಬೇಕು’ ಎಂದು ಕೋರಿ ಅರ್ಜಿದಾರರು ಈ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.