ಮಂಗಳೂರು: ನಗರದ ಜೆಪ್ಪು ಕುಡುಪಾಡಿ ರೈಲ್ವೆ ಹಳಿ ಸಮೀಪ ನಿಲ್ಲಿಸಿದ್ದ ಇನೋವಾ ಕಾರು ಮತ್ತು ಜೀಪು ಮಂಗಳವಾರ ರಾತ್ರಿ ಬೆಂಕಿಗಾಹುತಿಯಾಗಿವೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸ್ಥಳೀಯ ನಿವಾಸಿ ರಾಜೇಶ್ ಅವರಿಗೆ ಈ ವಾಹನಗಳು ಸೇರಿವೆ. ಅವರು ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಮನೆಗೆ ತೆರಳಿದ್ದರು. ರಾತ್ರಿ 11 ಗಂಟೆವರೆಗೆ ವಾಹನಗಳು ಸುಸ್ಥಿತಿಯಲ್ಲಿದ್ದವು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ ಇದ್ದಕ್ಕಿದ್ದಂತೆ ವಾಹನಗಳು ಹೊತ್ತಿ ಉರಿದಿದ್ದವು. ಇದನ್ನು ಗಮನಿಸಿದ ಸ್ಥಳೀಯರು ವಾಹನ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಹೊತ್ತಿ ಉರಿಯುತ್ತಿದ್ದ ವಾಹನಗಳ ಪಕ್ಕದಲ್ಲಿ ಆಟೊರಿಕ್ಷಾ ಸೇರಿದಂತೆ ಅನೇಕ ವಾಹನಗಳನ್ನು ನಿಲ್ಲಿಸಲಾಗಿತ್ತು. ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿ ಹಾದುಹೋಗಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ವಾಹನಗಳ ಮಾಲೀಕ ರಾಜೇಶ್ ಈ ಘಟನೆ ಕುರಿತು ಯಾರ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿಲ್ಲ. ದಾರಿಹೋಕರು ಸಿಗರೇಟ್ ಸೇದಿ ಬಿಸಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.