
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸರ್ಕಾರದ ಆದೇಶಕ್ಕೆ ಕಾನೂನು ಬಲ ನೀಡುವ ಉದ್ದೇಶದಿಂದ, ವಿಧಾನಮಂಡಲ ಅನುಮೋದನೆ ನೀಡಿದ್ದ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಸರ್ಕಾರ ಅನುಮೋದನೆ ಪಡೆದಿತ್ತು. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆಯನ್ನೂ ವಾಪಸ್ ಕಳುಹಿಸಲಾಗಿದೆ. ಒಟ್ಟು 22 ಮಸೂದೆಗಳಲ್ಲಿ 19 ಮಸೂದೆಗಳಿಗೆ ಒಪ್ಪಿಗೆ ಅಂಕಿತ ನೀಡಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಕರ್ನಾಟಕ ದ್ವೇಷ ಭಾಷಣ ಮತ್ತು ದೇಷ ಅಪರಾಧಗಳ (ತಡೆ) ಮಸೂದೆ ರಾಜ್ಯಪಾಲರ ಪರಿಶೀಲನೆಯಲ್ಲಿದೆ ಎಂದು ಪ್ರಕಟಣೆ ಹೇಳಿದೆ.
‘ಈ ಕುರಿತ ಕಡತಗಳು ಇನ್ನೂ ಬಂದಿಲ್ಲ, ಅದು ಬಂದ ನಂತರ ಯಾವ ಅಂಶಗಳ ಕುರಿತು ಸ್ಪಷ್ಟೀಕರಣ ಕೋರಿದ್ದಾರೆ ಎಂಬುದು ಗೊತ್ತಾಗಲಿದೆ’ ಎಂದು ಕಾನೂನು ಇಲಾಖೆ ಮೂಲಗಳು ತಿಳಿಸಿವೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಸರ್ಕಾರದ ಆದೇಶ ಹೊರಡಿಸಿತ್ತು. ಇದರ ರಕ್ಷಣೆಗಾಗಿ, ಮಸೂದೆಯನ್ನೂ ಸರ್ಕಾರ ರೂಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.