ಕೆ.ಎಚ್. ಮುನಿಯಪ್ಪ
ಬೆಂಗಳೂರು: ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯು ಅನುಷ್ಠಾನಗೊಳ್ಳುವುದು ಶೇ 100ರಷ್ಟು ಖಚಿತ. ಈ ಬಗ್ಗೆ ಯಾವುದೇ ಅನುಮಾನ ಇಲ್ಲ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಎಲ್ಲರಿಗೂ ಆಯೋಗದ ವರದಿಯನ್ನು ನೀಡಿದ್ದಾರೆ. ಅದನ್ನು ಅಧ್ಯಯನ ಮಾಡಿ ಇದೇ 16ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಗೆ ಹೋಗುತ್ತೇವೆ. ಏನೇ ಗೊಂದಲಗಳಿದ್ದರೂ ಕುಳಿತು ಬಗೆಹರಿಸಿಕೊಳ್ಳುತ್ತೇವೆ. ಒಟ್ಟಾಗಿ ತೀರ್ಮಾನ ಮಾಡುತ್ತೇವೆ’ ಎಂದರು.
‘ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಶಿವರಾಜ ತಂಗಡಗಿ, ಹಲವು ಶಾಸಕರು ತಮ್ಮ ಅಭಿಪ್ರಾಯ ನೀಡಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲ 101 ಮೂಲ ಜಾತಿಗಳಿಗೂ ಮೀಸಲಾತಿ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಮೂಲ ಉದ್ದೇಶ’ ಎಂದರು.
‘ಜಾತಿ ಪಟ್ಟಿಯಲ್ಲಿರುವ ಯಾರನ್ನೂ ಕೈಬಿಡುವಂತೆ ಇಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಹಿಂದುಳಿದಿರುವಿಕೆಯ ಆಧಾರದಲ್ಲಿ ಮೀಸಲಾತಿ ಆಗಬೇಕು. ನಾಗಮೋಹನ್ದಾಸ್ ಉತ್ತಮ ವರದಿ ನೀಡಿದ್ದಾರೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.