ADVERTISEMENT

ರಾಜ್ಯದಲ್ಲಿ ಹೂಡಿಕೆ ಮಾಡಿ: ಸಿ.ಎಂ

ಏಪ್ರಿಲ್‌–ಜೂನ್‌ನಲ್ಲಿ ₹10 ಸಾವಿರ ಕೋಟಿ ಹೂಡಿಕೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 23:36 IST
Last Updated 2 ಡಿಸೆಂಬರ್ 2020, 23:36 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ‘ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕ ಅತಿ ಹೆಚ್ಚು, ಅಂದರೆ ₹ 10 ಸಾವಿರ ಕೋಟಿ ವಿದೇಶಿ ನೇರ ಹೂಡಿಕೆ ಗಳಿಸಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿವಿಧ ದೇಶಗಳ ರಾಯಭಾರಿಗಳು, ರಾಜತಾಂತ್ರಿಕರ ಜೊತೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಮಾತುಕತೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಹೂಡಿಕೆಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಐಟಿ, ಐಟಿಇಎಸ್ ಸೇವೆಗಳು, ಯಂತ್ರೋಪಕರಣಗಳು, ಉತ್ಪಾದನೆ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನ ಮತ್ತು ಎಂಜಿನಿ ಯರಿಂಗ್ ಕ್ಷೇತ್ರಗಳಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವ ರಿಸಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿದರು.

ADVERTISEMENT

‘ಹೂಡಿಕೆದಾರರ ಹಿತ ಗಮನದಲ್ಲಿಟ್ಟು ರಾಜ್ಯದಲ್ಲಿ ಸುಧಾರಣಾ ನೀತಿ ತರಲಾಗಿದೆ. ಇದರಿಂದಾಗಿ ಅತಿ ಹೆಚ್ಚು ವಿದೇಶಿ ನೇರ ಹೂಡಿಕೆಯ ಜೊತೆಗೆ, ಜನವರಿಯಿಂದ ಮೇ ತಿಂಗಳವರೆಗಿನ ಹೂಡಿಕೆ ಪ್ರಸ್ತಾಪಗಳಲ್ಲಿ ಶೇ 50ರಷ್ಟು ತನ್ನದಾಗಿಸಿಕೊಂಡಿದೆ. ಹೂಡಿಕೆ ಪ್ರಸ್ತಾವಗಳ ಮೊತ್ತ ₹ 1.1 ಲಕ್ಷ ಕೋಟಿ’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ತುಮಕೂರಿನಲ್ಲಿ 10 ಸಾವಿರ ಎಕರೆ ವಿಸ್ತೀರ್ಣದಲ್ಲಿ ದೇಶದ ಅತಿ ದೊಡ್ಡ ಕೈಗಾರಿಕಾ ಟೌನ್‌ಶಿಪ್‌ ಬರಲಿದೆ. ಅಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ಬೆಂಗಳೂರು ಮಾತ್ರವಲ್ಲದೇ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಂಥ ಎರಡನೇ ಹಂತದ ನಗರಗಳಲ್ಲಿ ಹೂಡಿಕೆಗೆ ಪೂರಕ ವಾತಾ ವರಣ ಕಲ್ಪಿಸಲಾಗುವುದು’ ಎಂದರು.

‘ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ಸರ್ಕಾರವು ಹೊಸ ಕೈಗಾರಿಕಾ ನೀತಿ ಜಾರಿಗೆ ತಂದಿದೆ. ಭೂಮಿ ಖರೀದಿ ಪ್ರಕ್ರಿಯೆ ಸರಳಗೊಳಿಸಲು, ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ವಿವರಿಸಿದರು.

ಪೆರು ರಾಯಭಾರಿ ವಿಕ್ರಮ್ ವಿಶ್ವನಾಥ್ ಅವರು ನಿಯೋಗದ ನೇತೃತ್ವ ವಹಿಸಿದ್ದರು. ಮಾಲಿ, ಸ್ಪೇನ್‌ ಸೇರಿದಂತೆ 13 ದೇಶಗಳ ಕಾನ್ಸುಲ್ ಜನರಲ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.