ADVERTISEMENT

'ಇನ್‌ವೆಸ್ಟ್‌ ಕರ್ನಾಟಕ’ದಿಂದ ₹ 6.23 ಲಕ್ಷ ಕೋಟಿ ಬಂಡವಾಳ: ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 16:20 IST
Last Updated 4 ಮಾರ್ಚ್ 2025, 16:20 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಬೆಂಗಳೂರು: ‘ಇತ್ತೀಚೆಗೆ ನಡೆದ ‘ಇನ್‌ವೆಸ್ಟ್‌ ಕರ್ನಾಟಕ-2025’ದಲ್ಲಿ 98 ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು, ₹ 6.24 ಕೋಟಿ ಬಂಡವಾಳ ಹರಿದು ಬರಲಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಎಸ್‌.ವಿ. ಸಂಕನೂರ ಪ್ರಶ್ನೆಗೆ ಉತ್ತರಿಸಿದ ಅವರು, ‘₹ 4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1,101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆದಿವೆ’ ಎಂದರು.

‘ರಾಜ್ಯದ 2,892, ಹೊರರಾಜ್ಯಗಳ 286 ಮತ್ತು ವಿದೇಶಗಳ 72 ಹೂಡಿಕೆದಾರ ಉದ್ಯಮಿಗಳು ₹ 26,331 ಕೋಟಿ, ಬೆಂಗಳೂರು ನಗರ ಜಿಲ್ಲೆಯಲ್ಲಿ 14 ಕಂಪನಿಗಳು ₹ 35,297 ಕೋಟಿ, ಉಳಿದ ಜಿಲ್ಲೆಗಳಲ್ಲಿ 54 ಯೋಜನೆಗಳಿಗೆ ಕಂಪನಿಗಳು ಬಂಡವಾಳ ಹೂಡಿಕೆ ಮಾಡಲಿವೆ. ಉತ್ತರ ಕರ್ನಾಟಕ ಭಾಗದಲ್ಲೇ ಶೇ 45ರಷ್ಟು ಹೂಡಿಕೆ ಆಗಲಿದೆ’ ಎಂದು ವಿವರಿಸಿದರು.

ADVERTISEMENT

ಇನ್ಫೊಸಿಸ್‌– ವಿಳಂಬಕ್ಕೆ ಅಸಮಾಧಾನ: ‘ಹುಬ್ಬಳ್ಳಿಯಲ್ಲಿ ಇನ್ಫೊಸಿಸ್‌ಗೆ 42 ಎಕರೆ ಭೂಮಿ ನೀಡಿ ಹಲವು ವರ್ಷ ಕಳೆದರೂ ಇನ್ನೂ ಕಾರ್ಯಾಚರಣೆ ಆರಂಭಿಸಿಲ್ಲ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಈ ಸಂಬಂಧ ಮತ್ತೊಮ್ಮೆ ಸಭೆ ಕರೆದು, ಕ್ಯಾಂಪಸ್‌ ಕಾರ್ಯಾರಂಭಕ್ಕೆ ಸೂಚಿಸಲಾಗುವುದು’ ಎಂದರು.


‘60 ಲಕ್ಷ ಮನೆಗಳಿಗೆ ಅನಿಲ ಸಂಪರ್ಕ’

‘ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಒಂದೊಂದು ದರ ನಿಗದಿಪಡಿಸಿದ್ದ ಕಾರಣ ಮನೆ ಮನೆಗೆ ಅನಿಲ ಸಂಪರ್ಕ ಒದಗಿಸುವುದು ವಿಳಂಬವಾಗಿದೆ. ಈ ಸಮಸ್ಯೆ ಸದ್ಯ ಬಗೆಹರಿದಿದ್ದು, 2030ರೊಳಗೆ ಉಳಿದ 60 ಲಕ್ಷ ಮನೆಗಳಿಗೆ ಕೊಳವೆ ಮಾರ್ಗದ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು’ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಬಿಜೆಪಿಯ ಡಿ.ಎಸ್‌. ಅರುಣ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಗರ ಅನಿಲ ಸರಬರಾಜು ನೀತಿ ಅನ್ವಯ (ಸಿಜಿಡಿ) ಅನಿಲ ಪೈಪ್‌ ಅಳವಡಿಕೆ ಮತ್ತು ಮೇಲ್ವಿಚಾರಣಾ ಶುಲ್ಕವನ್ನು ಮೀಟರ್‌ಗೆ ₹ 1 ನಿಗದಿಪಡಿಸಲಾಗಿದೆ. ಇದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕೆಂದು ಅನಿಲ ಪೂರೈಕೆ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 66.25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸುವ ಮತ್ತು 1,022 ಸಿಎನ್‌ಜಿ ಮರುಪೂರಣ ಕೇಂದ್ರಗಳನ್ನು ತೆರೆಯುವ ಗುರಿ ಹೊಂದಲಾಗಿದೆ’ ಎಂದು ವಿವರಿಸಿದರು.

‘ಅಡಿಕೆಗೆ ರೋಗ: ಪರಿಹಾರಕ್ಕೆ ಪ್ರಸ್ತಾವ’

ಬೆಂಗಳೂರು: ‘ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಎಲೆ ಚುಕ್ಕಿ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾಗಿರುವ ರೈತರಿಗೆ ಪರಿಹಾರ ಸಂಬಂಧ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ' ಎಂದು ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಕಿಶೋರ್ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಎಲೆಚುಕ್ಕಿ ರೋಗದಿಂದ ಹಾನಿಯಾಗಿರುವ ರಾಜ್ಯದ 53,977 ಹೆಕ್ಟೇರ್ ಪ್ರದೇಶಕ್ಕೆ ₹ 225.73 ಕೋಟಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 112.83 ಕೋಟಿಗೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ₹ 37 ಕೋಟಿ ಮಂಜೂರು ಮಾಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.