ಬೆಂಗಳೂರು: ಬಳ್ಳಾರಿ ಹೊರವಲಯದಲ್ಲಿ ಬೆಲೆಬಾಳುವ ಜಮೀನು ಕಬಳಿಸಿದ ಆರೋಪಕ್ಕೊಳಗಾಗಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ‘ಭೂಕಬಳಿಕೆ ತಡೆ ವಿಶೇಷ ನ್ಯಾಯಾಲಯ’ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಾಧೀಶ ಎಚ್.ಎನ್.ನಾರಾಯಣ ನೇತೃತ್ವದ ಪೀಠ, ಈ ಪ್ರಕರಣದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಳ್ಳಾರಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. 2008ರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶ್ರೀರಾಮುಲು, ಕೌಲ್ ಬಜಾರ್ ಪ್ರದೇಶದಲ್ಲಿ 57 ಎಕರೆ ಸರ್ಕಾರಿ ಮತ್ತು ಖಾಸಗಿ ಜಮೀನು ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗ ಅವರು ಸಂಪುಟ ದರ್ಜೆ ಸಚಿವರಾಗಿದ್ದರು.
ನಿವೇಶನ ಕಳೆದುಕೊಂಡಿರುವ ಹಿರಿಯ ನಾಗರಿಕ ಜಿ.ಕೃಷ್ಣಮೂರ್ತಿ ಅವರು ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.