ADVERTISEMENT

ಮಹೇಶ ಜೋಶಿ ವಿರುದ್ಧ ಆರೋಪ | ತನಿಖೆಗೆ ತಂಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 15:41 IST
Last Updated 31 ಜುಲೈ 2025, 15:41 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿ ವಿವಿಧ ದೂರುಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರನ್ನು ತನಿಖಾ ಸಮಿತಿ ಒಳಗೊಂಡಿದೆ. 30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. 

ಕಸಾಪ ಹಾಲಿ ಅಧ್ಯಕ್ಷ ಮಹೇಶ ಜೋಶಿ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಅವರ ಅವಧಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದ್ದು, ಪರಿಷತ್ತಿನ ಸದಸ್ಯರಿಗೆ ವಿನಾಕಾರಣ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅವರು ನಡೆಸಿದ ಹಣಕಾಸಿನ ಅವ್ಯವಹಾರ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸಿ, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸುವಂತೆ ದೂರುದಾರರು ಆಗ್ರಹಿಸಿದ್ದರು ಎಂದು ತಿಳಿಸಲಾಗಿದೆ. 

ADVERTISEMENT

ಪರಿಷತ್ತಿಗೆ ಕೂಡಲೇ ಆಡಳಿತಾಧಿಕಾರಿ ನೇಮಿಸಲು ಒತ್ತಾಯಿಸಿರುವ ದೂರುದಾರರು, ಅಕ್ರಮಗಳ ಬಗ್ಗೆ ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸುವಂತೆ ಮನವಿ ಮಾಡಲಾಗಿತ್ತು. ಆದ್ದರಿಂದ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ. 

‘ಈ ಆದೇಶ ಅಸಿಂಧು ಆಗಲಿದೆ’
‘ದೂರುಗಳ ಆಧಾರದ ಮೇಲೆ ಸಹಕಾರ ಇಲಾಖೆ ಈಗಾಗಲೇ ವಿಚಾರಣೆ ಆರಂಭಿಸಿದೆ. ಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಹಣಕಾಸು ಸಮಿತಿ ಪ್ರಕಟಣಾ ಸಮಿತಿಯಲ್ಲಿಯೂ ಚರ್ಚಿಸಿ ದಾಖಲೆ ಸಮೇತ ಸಮಗ್ರ ಉತ್ತರವನ್ನು ಸೆ.15ರೊಳಗೆ ನೀಡುವುದಾಗಿ ವಿಚಾರಣಾಧಿಕಾರಿಗೆ ತಿಳಿಸಿದ್ದೇವೆ. ಈಗಾಗಲೇ ನೀಡಿರುವ ದೂರು ಅರ್ಜಿಗಳ ವಿಚಾರಣೆ ನಡೆಯುತ್ತಿರುವಾಗ ಅದೇ ದೂರು ಅರ್ಜಿಗಳ ಮೇಲೆ ಮತ್ತೊಂದು ವಿಚಾರಣೆ ಮಾಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಇದನ್ನು ‘ಡಬಲ್ ಜಿಯೋಪಾರ್ಡಿ’ ಎಂದು ಕರೆಯುತ್ತಾರೆ. ಹಾಗಾಗಿ ನ್ಯಾಯಾಲಯದಲ್ಲಿ ಈ ಆದೇಶ ಅಸಿಂಧುವಾಗಲಿದೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.