ADVERTISEMENT

ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ವರ್ಗಾವಣೆ ಮಾಡಿದ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2023, 11:19 IST
Last Updated 21 ಫೆಬ್ರುವರಿ 2023, 11:19 IST
ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್‌
ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್‌   

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷ ತಾರಕ್ಕೇರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.

ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮುನೀಶ್‌ ಮೌದ್ಗಿಲ್‌ ಅವರನ್ನು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

‘ಶಾಸಕ ಸಾ.ರಾ. ಮಹೇಶ್‌ ಜತೆ ಸಿಂಧೂರಿ ಸಂಧಾನಕ್ಕೆ ಯತ್ನಿಸಿದ್ದಾರೆ’ ಎಂಬ ಸುದ್ದಿಯನ್ನು ಪ್ರಸ್ತಾಪಿಸಿದ್ದ ರೂಪಾ ಭಾನುವಾರ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದರು. ಅವರಿಗೆ ಸಂಬಂಧಿಸಿದ 20 ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲು ಹಾಕಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಂಧೂರಿ, ‘ವೈಯಕ್ತಿಕ ಹಗೆ ಸಾಧಿಸುವುದಕ್ಕಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆಗೆ ಒಳಗಾದರೆ ಅದು ಸಮಾಜಕ್ಕೆ ಬಹುದೊಡ್ಡ ಅಪಾಯಕಾರಿ ಬೆಳವಣಿಗೆ’ ಎಂದಿದ್ದರು.

ಅಧಿಕಾರಿಗಳ ಬೀದಿಜಗಳದಿಂದ ಮುಜುಗರಕ್ಕೆ ಒಳಗಾಗಿರುವ ಸರ್ಕಾರ, ಶಿಸ್ತು ಉಲ್ಲಂಘನೆ, ದುರ್ನಡತೆ, ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ. ಇಬ್ಬರಿಗೂ ನೋಟಿಸ್‌ ನೀಡಲಾಗಿದೆ.

‘ಮುಖ್ಯಕಾರ್ಯದರ್ಶಿ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ಅವರು ನೀಡಿರುವ ದೂರಿನ ಪತ್ರದ ಆಧಾರದಲ್ಲಿ ಕ್ರಮ ಕೈಗೊಳ್ಳಲು ಪರಿಶೀಲಿಸುತ್ತಿದ್ದಾರೆ. ಮಾಧ್ಯಮಗಳಿಂದ ಅಂತರ ಕಾಪಾಡಿಕೊಂಡು, ಶಿಸ್ತು ಕಾಪಾಡುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಸರ್ಕಾರ ಎಚ್ಚರಿಕೆ ನೀಡಿದ ಬಳಿಕವೂ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮಧ್ಯದ ಜಟಾಪಟಿ ಸೋಮವಾರವೂ ಸಾಮಾಜಿಕ ಜಾಲ ತಾಣಗಳಲ್ಲಿ ಮುಂದುವರಿದಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.