ADVERTISEMENT

ಕುಂದಾಪುರ: ಭಾನುವಾರ ಐಪಿಎಸ್ ಅಧಿಕಾರಿ ಮಧುಕರ್‌ ಶೆಟ್ಟಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 8:54 IST
Last Updated 29 ಡಿಸೆಂಬರ್ 2018, 8:54 IST
ಮಧುಕರ್‌ ಶೆಟ್ಟಿ
ಮಧುಕರ್‌ ಶೆಟ್ಟಿ   

ಉಡುಪಿ: ರಾಜ್ಯದ ಐಪಿಎಸ್ ಅಧಿಕಾರಿ ಮಧುಕರ್‌ಶೆಟ್ಟಿ ಅವರ ಅಂತ್ಯಕ್ರಿಯೆ ಕುಂದಾಪುರ ತಾಲ್ಲೂಕಿನ ಯಡ್ಡಾಡಿಯಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ತೀವ್ರ ಜ್ವರ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಧುಕರ್ ಶೆಟ್ಟಿ (47) ಅವರು ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಡಿ. 25ರಂದು ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಪಾರ್ಥಿವ ಶರೀರವನ್ನು ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತರಲಾಗುತ್ತದೆ. ಇಂದು ಮಧ್ಯಾಹ್ನ 1 ಗಂಟೆಗೆ ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು.

ರಾತ್ರಿ 8ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗುವುದು. ಬಳಿಕ ಹುಟ್ಟೂರು ಯಡ್ಡಾಡಿಗೆ ತಂದು ದರ್ಶನಕ್ಕೆ ಇಡಲಾಗುವುದು. ನಾಳೆ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಮಧುಕರ್‌ಶೆಟ್ಟಿ ನಿಧನಕ್ಕೆ ಸಚಿವ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ
ಮಂಗಳೂರು:
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಶನಿವಾರ ರಾತ್ರಿ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದ್ದು, ರಾತ್ರಿ 10 ಗಂಟೆಯವರೆಗೆ ಮಂಗಳೂರು ನಗರ ಕಮಿಷನರೇಟ್ ವತಿಯಿಂದ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಈ ಸಮಯದಲ್ಲಿ ನಗರದ ಪ್ರಮುಖರಿಗೆ ಮತ್ತು ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ‌ ಎಂದು ಡಿಸಿಪಿ ಉಮಾ ಪ್ರಶಾಂತ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.