ಬೆಂಗಳೂರು: ಐಎಂಎ (ಐ–ಮಾನಿಟರಿ ಅಡ್ವೈಸರಿ) ಸಂಸ್ಥೆಯಿಂದ ನಡೆದಿದೆ ಎನ್ನಲಾದ ಸುಮಾರು ₹ 4,000 ಕೋಟಿವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿಗಳಾದ ಡಿವೈಎಸ್ಪಿ, ಇನ್ಸ್ಪೆಕ್ಟರ್ ಹಾಗೂ ಪಿಎಸ್ಐ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿ ಅವರು ಸಹ ಪ್ರಮುಖ ಆರೋಪಿಗಳಾಗಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಸಿಬಿಐ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಪ್ರಕರಣದಲ್ಲಿ ಭಾಗಿಯಾಗಿರುವ ಐಪಿಎಸ್ ಹಾಗೂ ನಾನ್ ಐಪಿಎಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಅದನ್ನು ಪೂರ್ತಿಯಾಗಿ ಜಾರಿಗೆ ತಂದಿಲ್ಲ. ಐಪಿಎಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೇ, ಕೇಂದ್ರ ಸರ್ಕಾರಕ್ಕೂ ಯಾವುದೇ ಶಿಫಾರಸು ಮಾಡದೇ ಸೇವೆಯಲ್ಲಿ ಉಳಿಸಿಕೊಂಡಿದ್ದಾರೆ’ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಆದೇಶದ ವಿವರ: ‘ಐಎಂಎ ಪ್ರಕರಣದಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದೆ. ಅದನ್ನು ಪರಿಶೀಲಿಸಿ, ಸಿಐಡಿ ಡಿವೈಎಸ್ಪಿ ಇ.ಬಿ. ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಎಂ. ರಮೇಶ್ ಹಾಗೂ ಪಿಎಸ್ಐ ಗೌರಿಶಂಕರ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.