ಬೆಂಗಳೂರು: 'ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಒಸಿಎಲ್ ಮಾಡಿರುವ ತಪ್ಪು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ. ಆದರೆ, ಕೆಐಒಸಿಎಲ್ ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ ₹ 1,400 ಕೋಟಿ ಬಾಕಿ ಕಟ್ಟಿಲ್ಲ. ತನ್ನ ತಪ್ಪು ಸರಿಪಡಿಸಿಕೊಳ್ಳಲು ತಯಾರಿಲ್ಲದ ಕಂಪನಿಗೆ ಮತ್ತಷ್ಟು ಪರಿಸರ ಹಾನಿ ಮಾಡಲು ಬಿಡಬೇಕೆ'' ಎಂದು ಪ್ರಶ್ನಿಸಿದರು.
'ಸರ್ಕಾರಿ ಸ್ವಾಮ್ಯದ ಕೆಐಒಸಿಎಲ್ ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿತ್ತು. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್.ಪಿ.ವಿ. ಮೊತ್ತ, ಬಡ್ಡಿ ಸೇರಿ ಸುಮಾರು ₹1,349.53 ಕೋಟಿ ಅರಣ್ಯ ಇಲಾಖೆಗೆ ಪಾವತಿಸಬೇಕಿದೆ, ಇದರ ಜೊತೆಗೆ 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕಿದೆ. ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅರಣ್ಯ ಇಲಾಖೆಗೆ ಕಟ್ಟಬೇಕಾದ ಬಾಕಿ ಮತ್ತು ಹಿಂತಿರುಗಿಸಬೇಕಾದ ಭೂಮಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ' ಎಂದೂ ಕೇಳಿದರು.
'ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ಕೆಐಒಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಸೂಕ್ತ ಅನುಮತಿ ಪಡೆಯದೇ ಕಂಪನಿಯು ನಿಯಮ ಉಲ್ಲಂಘಿಸಿದೆ. ಮಾಡಿರುವ ತಪ್ಪು ಸರಿಪಡಿಸಿಕೊಂಡು, ದಂಡ ಪಾವತಿಸಿ ಎಂದು ಹೇಳಿದರೆ ಅದು ಅಭಿವೃದ್ಧಿಗೆ ಅಡ್ಡಿ ಮಾಡುವ ರಾಜಕೀಯ ಆಗುತ್ತದೆಯೇ' ಎಂದು ಖಂಡ್ರೆ ಪ್ರಶ್ನಿಸಿದರು.
ಕೇಂದ್ರ ಉಕ್ಕು ಸಚಿವಾಲಯದಡಿ ಬರುವ ಎನ್.ಎಂ.ಡಿ.ಸಿ.ಗೆ ಉಕ್ಕು ಕಾರ್ಖಾನೆ ಸ್ಥಾಪಿಸಲು 2014ರಲ್ಲಿಯೇ ಬಳ್ಳಾರಿ ಬಳಿ ವೇಣಿವೀರಾಪುರದಲ್ಲಿ 2857.54 ಎಕರೆ ಜಮೀನು ನೀಡಲಾಗಿದೆ. ಉಕ್ಕು ಕಾರ್ಖಾನೆ ಆರಂಭಿಸಿದರೆ 50 ಸಾವಿರ ಜನರಿಗೆ ಉದ್ಯೋಗ ಲಭಿಸುತ್ತದೆ, ಕೆಐಒಸಿಎಲ್ ಮುಚ್ಚಿದರೆ 300 ಕಾರ್ಮಿಕರಿಗೆ ತೊಂದರೆ ಆಗುತ್ತದೆ ಎನ್ನುತ್ತಿದ್ದ ಕುಮಾರಸ್ವಾಮಿ ಈಗ 1,000 ಕಾರ್ಮಿಕರು ಎನ್ನುತ್ತಿದ್ದಾರೆ, ವೇಣಿಪುರದಲ್ಲಿ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ನೀಡಬಹುದು. ಏಕೆ ಆರಂಭ ಮಾಡುತ್ತಿಲ್ಲ' ಎಂದೂ ಪ್ರಶ್ನಿಸಿದರು.
ಎಚ್.ಎಂ.ಟಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಕೊಡಬೇಕೆ?: 'ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಜಮೀನು ಮಂಜೂರಾತಿಯ ಬಗ್ಗೆಯೇ ಅನುಮಾನವಿದೆ. ಎಚ್.ಎಂ.ಟಿ. ತನಗೆ ಮಂಜೂರಾಗಿದೆ ಎಂದು ಒದಗಿಸಿರುವ ದಾಖಲೆಯಲ್ಲಿ ಸರ್ವೆ ನಂಬರ್ ಮತ್ತು ಮಂಜೂರಾದ ದಿನಾಂಕ ಇಲ್ಲ. 443 ಎಕರೆ ಭೂಮಿ ಮಂಜೂರಾತಿ ಬಗ್ಗೆ ಅಥವಾ ಅರಣ್ಯೇತರ ಉದ್ದೇಶಕ್ಕೆ ಸರ್ಕಾರಿ ಆದೇಶ ಆಗಿರುವ ಯಾವುದೇ ಗೆಜೆಟ್ ಅಧಿಸೂಚನೆ ಇಲ್ಲ. ಹೀಗಿದ್ದೂ ಪ್ರಸ್ತುತ ಮುಚ್ಚಿಹೋಗಿರುವ ಎಚ್.ಎಂ.ಟಿ. ಅರಣ್ಯ ಜಮೀನನ್ನು ಖಾಸಗಿ ಬಿಲ್ಡರ್ ಗಳು ಸೇರಿದಂತೆ ಹಲವು ಕಂಪನಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದೆ. ಎಚ್.ಎಂ.ಟಿ.ಗೆ ರಿಯಲ್ ಎಸ್ಟೇಟ್ ದಂಧೆ ನಡೆಸಲು ಸರ್ಕಾರ ಅವಕಾಶ ಕೊಡಬೇಕೆ' ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.
'ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಡಿನೋಟಿಫೈ ಆಗಿಲ್ಲ. ಹೀಗಾಗಿ ಅದನ್ನು ಪರಭಾರೆ, ದಾನ ಮಾಡಲು ಅವಕಾಶವೇ ಇಲ್ಲ. ಅರಣ್ಯ ಭೂಮಿ ಮರಳಿ ಪಡೆಯುವುದರಲ್ಲಿ ತಪ್ಪೇನು? ಅಲ್ಲದೆ, ಕೆಲವೇ ಕೆಲವು ಅಧಿಕಾರಿಗಳು ಸಚಿವ ಸಂಪುಟದ ಗಮನಕ್ಕೂ ತಾರದೆ, ತಾವೇ ಸ್ವಯಂ ನಿರ್ಧಾರ ಕೈಗೊಂಡು ಸುಪ್ರೀಂಕೋರ್ಟ್ ಗೆ ಮಧ್ಯಂತರ ಅರ್ಜಿ (ಐಎ) ಹಾಕಿದ್ದರು, ಈ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸರ್ಕಾರದ ಸಮ್ಮತಿ ಇಲ್ಲದ ಐಎ ಹಿಂಪಡೆಯಲು ನಿರ್ಧರಿಸಲಾಗಿದ್ದು, ಇದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಲ್ಲಿ ಅಭಿವೃದ್ಧಿಗೆ ಅಡ್ಡಿಪಡಿಸುವ ಯಾವುದೇ ರಾಜಕೀಯ ಇಲ್ಲ' ಎಂದರು.
'ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ, ಮತ್ತು ಕೆಐಒಸಿಎಲ್ ವಿಚಾರದಲ್ಲಿ ಆರೋಪ ಮಾಡುವುದನ್ನು ಬಿಟ್ಟು, ರಾಜ್ಯದ ಹಿತದ ಬಗ್ಗೆಯೂ ಚಿಂತಿಸಬೇಕು' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.