ADVERTISEMENT

‘ವಿದ್ಯಾಗಮ’ ಪುನರ್‌ ಆರಂಭ ಸಾಧ್ಯವೇ: ಹೈಕೋರ್ಟ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 21:01 IST
Last Updated 7 ಡಿಸೆಂಬರ್ 2020, 21:01 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೋವಿಡ್ ಕಾರಣದಿಂದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲ್ಪಿಸಲು ಜಾರಿಗೆ ತಂದಿದ್ದ ‘ವಿದ್ಯಾಗಮ’ ಯೋಜನೆ ಪುನರಾರಂಭಿಸಬಹುದೇ ಎಂಬ ಬಗ್ಗೆ ಹತ್ತು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬಡ ಮಕ್ಕಳಿಗೆ ಆನ್‌ಲೈನ್ ಶಿಕ್ಷಣಕ್ಕಾಗಿ ಲ್ಯಾಪ್‌ಟಾಪ್ ಸೇರಿ ಅಗತ್ಯ ಸಲಕರಣೆ ಒದಗಿಸಲು ಕೋರಿ ವಕೀಲ ಎ.ಎ.ಸಂಜೀವ್ ನರೇನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ಎನ್.ಎಸ್. ಸಂಜಯ್‌ಗೌಡ ಅವರಿದ್ದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

‘ಕೋವಿಡ್‌ ಕಾರಣದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ. ಲ್ಯಾ‍ಪ್‌ಟಾಪ್ ವಿತರಣೆ ಕಷ್ಟ. ಕೋವಿಡ್‌ ಪ್ರಕರಣ ಹೆಚ್ಚಾಗಿದ್ದರಿಂದ ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಲಾಗಿದೆ. ಚಂದನ ವಾಹಿನಿ ಮೂಲಕ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ನೀಡಲಾಗುತ್ತಿದೆ’ ಎಂದು ಸರ್ಕಾರದ ಪರ ವಕೀಲರು ವಿವರಿಸಿದರು.

ADVERTISEMENT

ಸರ್ಕಾರಿ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ‘ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಕರ್ಯ ಹೊಂದಿರದ ಮಕ್ಕಳಿಗೆ ಶಿಕ್ಷಣ ನೀಡಲು ರೂಪಿಸಿರುವ ವಿದ್ಯಾಗಮ ಯೋಜನೆಯನ್ನು ಪುನಾರಾಂಭಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ’ ಎಂದು ಸೂಚಿಸಿತು.‘ಬಡ ವಿದ್ಯಾರ್ಥಿಗಳಿಗೆ ಲ್ಯಾ‍ಪ್‌ಟಾಪ್ ಒದಗಿಸಲು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್‌) ಪಡೆಯಬಹುದು’ ಎಂಬ ಸಲಹೆಯನ್ನು ಪೀಠ ನೀಡಿತು. ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.