ADVERTISEMENT

ಮಾಶಾಸನಕ್ಕಾಗಿ 5ಕಿ.ಮೀ ತೆವಳಿಕೊಂಡು ಬಂದ ಅಜ್ಜಿ: ‘ಕೈ’ ಗ್ಯಾರಂಟಿ ಪ್ರಶ್ನಿಸಿದ HDK

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2024, 12:58 IST
Last Updated 14 ಜನವರಿ 2024, 12:58 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕನ್ನು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಆದರೆ ಯೋಜನೆಗಳ ಹಣ ಜನರಿಗೆ ಸಕಾಲಕ್ಕೆ ತಲುಪುತ್ತಿದೆಯೇ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ಧಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಾಶಾಸನಕ್ಕಾಗಿ 5 ಕಿ.ಮೀ ತೆವಳಿಕೊಂಡು ಬಂದ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ. ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಕುಟುಕಿದ್ದಾರೆ.

ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನೋವಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

‘ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ’ ಎಂದು ಹೇಳಿದ್ದಾರೆ.

ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದೇ ಇಲ್ಲವೇ? ಎಂದಿದ್ದಾರೆ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಆ ತಾಯಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.