ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಗಂಗಾಧರ್ ಸೇರಿದಂತೆ ಕೆಲವರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಟ್ಟಿಹಾಕುವ ಪ್ರಯತ್ನ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೋಣನಕುಂಟೆ ಬ್ಲಾಕ್ನಲ್ಲಿರುವ ಗಂಗಾಧರ್ ಮನೆ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದೇವೆ. ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿದರು.
‘ಗಂಗಾಧರ್ ಅವರು ಹಣಕಾಸಿನ ವಿಚಾರದಲ್ಲಿ ಅನುಕೂಲಸ್ಥರು. ಸಾಕಷ್ಟು ಜಮೀನು ಇದೆ. ಬೇರೆ ಪಕ್ಷಗಳಲ್ಲಿ ಅವರಿಗಿಂತಲೂ ಶ್ರೀಮಂತರಿದ್ದಾರೆ. ಅವರ ಮನೆಗಳ ಮೇಲೆ ದಾಳಿಯಾಗಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಯುತ್ತಿದೆ. ಡಿ.ಕೆ ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಪ್ತರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ’ ಎಂದು ಪ್ರತಿಭಟನೆ ನಿರತರು ದೂರಿದರು.
ಗಂಗಾಧರ್ ಅವರ ಜತೆಗೆ ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಸುರೇಶ್ ಅವರ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಎಂಬವರ ಮನೆಗಳ ಮೇಲೆಯೂ ದಾಳಿ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.