ADVERTISEMENT

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಐ.ಟಿ ಪ್ರಕರಣ: ಆಕ್ಷೇಪಣೆ ಸಲ್ಲಿಸಿದ ಇ.ಡಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 12:03 IST
Last Updated 22 ಫೆಬ್ರುವರಿ 2019, 12:03 IST
ಸಚಿವ ಡಿ.ಕೆ.ಶಿವಕುಮಾರ್
ಸಚಿವ ಡಿ.ಕೆ.ಶಿವಕುಮಾರ್   

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐ.ಟಿ) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ.

ಪ್ರಕಣರದ ಸಂಬಂಧ ವಿಚಾರಣೆಗೆ ಹಾಜರಾಗಲು ಇ.ಡಿ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಇ.ಡಿ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಿದರು.

ADVERTISEMENT

"ಹಣ ಲೇವಾದೇವಿ ಪ್ರಕರಣಗಳು ದೇಶದ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿವೆ. ಈ ಪ್ರಕರಣದಲ್ಲಿ ಇನ್ನೂ ಸಮಗ್ರ ತನಿಖೆ ನಡೆದೇ‌ ಇಲ್ಲ. ಆಗಲೇ ಅರ್ಜಿದಾರರು ಸಮನ್ಸ್ ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವುದು ಸಮರ್ಥನೀಯವಲ್ಲ. ಅರ್ಜಿದಾರರ ಮನವಿಗೆ ಕಾನೂನು ಆಧಾರಿತ ಯೋಗ್ಯತೆ ಇಲ್ಲ. ಆದ್ದರಿಂದ ಅರ್ಜಿ ರದ್ದುಗೊಳಿಸಬೇಕು" ಎಂದು ಆಕ್ಷೇಪಣೆಯಲ್ಲಿ ಕೋರಲಾಗಿದೆ.

ಪ್ರಕರಣವನ್ನು ಅಂತಿಮ ವಿಚಾರಣೆಗಾಗಿ ಮಾರ್ಚ್ 7 ಕ್ಕೆ ಮುಂದೂಡಲಾಗಿದೆ.

ಏತನ್ಮಧ್ಯೆ, "ಈ ಹಿಂದೆ ನ್ಯಾಯಪೀಠ ತಿಳಿಸಿದಂತೆ ಅರ್ಜಿದಾರರು ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದರೆ ಅದನ್ನು ಪರಿಗಣಿಸಬೇಕು" ಎಂದು ನ್ಯಾಯಪೀಠ ಪುನರುಚ್ಚರಿಸಿದೆ.

ಡಿ.ಕೆ. ಶಿವಕುಮಾರ್ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.