ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಮಲಪ್ರಭಾದಿಂದ ಕುಡಿಯುವ ನೀರು ಪೂರೈಕೆ ಮಾಡಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲಾಗಿದೆ. ಮುಖ್ಯಮಂತ್ರಿ ಒಪ್ಪಿಗೆ ಪಡೆದು, ಶೀಘ್ರ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಕಲಘಟಗಿ ತಾಲ್ಲೂಕಿನ ನೀರಸಾಗರ ಜಲಾಶಯಕ್ಕೆ ಸೋಮವಾರ ಬಾಗೀನ ಅರ್ಪಿಸಿ ಅವರು ಮಾತನಾಡಿದರು.
ಯೋಜನೆ ಜಾರಿಯಾದರೆ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಹಗೆಹರಿಯಲಿದೆ. ಮನೆ ಮನೆಗೆ ನಿತ್ಯ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದರು.
ಬೃಂದಾವನ ಮಾದರಿ ಅಭಿವೃದ್ಧಿ:
ನೀರಸಾಗರ ಜಲಾಶಯದ ಆಸುಪಾಸಿನಲ್ಲಿರುವ 300 ಎಕರೆ ಸರ್ಕಾರಿ ಜಾಗವನ್ನು ಮೈಸೂರಿನ ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ, ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಮತ್ತು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ತಕ್ಷರಿಗೆ ಸೂಚಿಸಲಾಗಿದೆ ಎಂದರು.
ಮಂಡಳಿ ಅಧ್ಯಕ್ಷ ಹಾಗೂ ಸುರಪುರ ಶಾಸಕ ರಾಜೂಗೌಡ, ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪಾಲಿಕೆ ಅಧ್ಯಕ್ಷ ಸುರೇಶ ಇಟ್ನಾಳ, ಕಲಘಟಗಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುನೀತಾ ಮೇಲಿನಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.