ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 409ರ ಅಡಿಯಲ್ಲಿ ವಿಚಾರಣೆಯಿಂದ ಕೈಬಿಟ್ಟ ಅಧೀನ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಕುರಿತಂತೆ ಸಿಬಿಐ ದಾಖಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲ ಪಿ.ಪ್ರಸನ್ನಕುಮಾರ್, ‘ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಆರನೇ ಆರೋಪಿಯಾಗಿದ್ದು, ಈಗಾಗಲೇ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಅಂತೆಯೇ ಐಪಿಸಿ ಕಲಂ 409ರ ಅಡಿಯಲ್ಲಿ ಆರೋಪ ಸಾಬೀತಾದರೆ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ’ ಎಂದು ವಿವರಿಸಿರು.
‘ದೋಷಾರೋಪ ಪಟ್ಟಿಯಿಂದ ಆರೋಪಿಯನ್ನು ಕೈಬಿಡಲು ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಈ ಹಿಂದಿನ ನ್ಯಾಯಾಧೀಶ ಬಿ.ವಿ.ಪಾಟೀಲ ಅವರು 2018ರ ಸೆ.18ರಂದು ಮಾನ್ಯ ಮಾಡಿರುವುದು ಕಾನೂನು ಬಾಹಿರ. ಆದ್ದರಿಂದ ಆ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದರು. ಈ ವಾದಾಂಶ ಪುರಸ್ಕರಿಸಿದ ನ್ಯಾಯಪೀಠ, ‘ಶಾಸಕರು–ಸಂಸದರ ವಿ
ರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಕೋರ್ಟ್ ಆದೇಶಕ್ಕೆ 6 ವಾರಗಳ ಮಧ್ಯಂತರ ತಡೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.