
ಜನಾರ್ದನ ರೆಡ್ಡಿ
ಕೊಪ್ಪಳ: ಬಳ್ಳಾರಿಯಲ್ಲಿ ಗುಂಡಿನ ಘರ್ಷಣೆ ನಡೆದ ಬಳಿಕ ನನ್ನ ಜೀವಕ್ಕೆ ಅಪಾಯ ಎದುರಾಗಿದ್ದು ತುರ್ತಾಗಿ 'ಝಡ್' ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಜಿ.ಪರಮೇಶ್ವರ್ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಆತನ ಗೂಂಡಾ ಸಹಚರರು ಪೆಟ್ರೋಲ್ ಬಾಂಬ್ ಹಾಗೂ ಬಂದೂಕು ಬಳಸಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ರಾಜ್ಯ ಸರ್ಕಾರ ವಿಫಲವಾಗಿದೆ. ಅತ್ಯಂತ ಆಕ್ರೋಶ ಹಾಗೂ ಆಘಾತದೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದು ಸರ್ಕಾರ ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಅವರು ಕೋರಿದ್ದಾರೆ.
ಬಳ್ಳಾರಿಯ ನನ್ನ ನಿವಾಸದ ಬಳಿ ನಡೆದ ಭೀಕರ ದಾಳಿಯು ಸಾಮಾನ್ಯ ರಾಜಕೀಯ ಘರ್ಷಣೆಯಲ್ಲ. ನನ್ನನ್ನು ವ್ಯವಸ್ಥಿತವಾಗಿ ಮುಗಿಸಲು ನಾರಾ ಭರತ್ ರೆಡ್ಡಿ ನಡೆಸಿದ ಪೂರ್ವ ನಿಯೋಜಿತ ಹತ್ಯೆಯ ಸಂಚು ಎಂದು ಆರೋಪಿಸಿರುವ ಶಾಸಕ ರೆಡ್ಡಿ ಶಾಸಕನ ಮೇಲೆ ಪೆಟ್ರೋಲ್ ಬಾಂಬ್ ಹಾಗೂ ಬಂದೂಕುಗಳೊಂದಿಗೆ ಬಂದು ಪೊಲೀಸರ ಎದುರೇ ದಾಂಧಲೆ ನಡೆಸಿ ಹತ್ಯೆಗೆ ಯತ್ನಿಸಿರುವುದು ನೋಡಿದರೆ ರಾಜ್ಯದಲ್ಲಿ ‘ಜಂಗಲ್ ರಾಜ್’ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿದ್ದಾರೆ.
ಆದ್ದರಿಂದ ಸರ್ಕಾರ ತುರ್ತಾಗಿ ನನಗೆ ಹಾಗೂ ನನ್ನು ಕುಟುಂಬಕ್ಕೆ ಝಡ್ ಶ್ರೇಣಿ ಅಥವಾ ಅದಕ್ಕೆ ಸಮಾನವಾದ ಉನ್ನತ ಪೊಲೀಸ್ ಭದ್ರತೆ ಒದಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿ ಒಂದು ವೇಳೆ ಮತ್ತೆ ದಾಳಿ ನಡೆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.